ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಮಿನಿ ವಿಧಾನಸೌಧದ ಒಳಗೆ ಪಾಕಿಸ್ತಾನದ ಪರ ಘೋಷಣೆ ಕೇಳಿ ಬಂದಿದೆ. ಬೆಳ್ಳಂಬೆಳಗ್ಗೆ ಮಿನಿ ವಿಧಾನಸೌಧ ಪ್ರವೇಶಿಸಿದ ವ್ಯಕ್ತಿ ನಿರಂತರವಾಗಿ ಪಾಕ್ ಪರ ಘೋಷಣೆಗಳನ್ನು ಕೂಗಿದ್ದಾನೆ. ಸ್ಥಳೀಯರು ಈತನ ಕೃತ್ಯಕ್ಕೆ ಅಡ್ಡಿ ವ್ಯಕ್ತಪಡಿಸಿದರೂ ಆತ ಮಾತು ಕೇಳದೆ ಪಾಕ್ ಪರ ಘೋಷಣೆ ಕೂಗಿದ್ದಾನೆ.
ದೇಶದ್ರೋಹಿ ಹೇಳಿಕೆಯನ್ನು ನೀಡಿದ ವ್ಯಕ್ತಿಯನ್ನು ಕುಂದಾಪುರ ಕೋಡಿ ನಿವಾಸಿ ರಾಘವೇಂದ್ರ ಗಾಣಿಗ ಎಂದು ಗುರುತಿಸಲಾಗಿದೆ. ಕೂಡಲೇ ಪೊಲೀಸ್ ಠಾಣೆಗೆ ಸ್ಥಳೀಯರು ಫೋನ್ ಮಾಡಿದ್ದಾರೆ. ಸ್ಥಳಕ್ಕಾಗಮಿಸಿದ ಕುಂದಾಪುರ ಎಸ್ಐ ಹರೀಶ್ ವ್ಯಕ್ತಿಯನ್ನು ವಶಕ್ಕೆ ಪಡಕೊಂಡಿದ್ದಾರೆ. ಪೊಲೀಸರು ದಸ್ತಗಿರಿ ಮಾಡುವಾಗಲೂ ವ್ಯಕ್ತಿ ಪಾಕ್ ಪರ ಘೋಷಣೆಗಳನ್ನು ಕೂಗಿದ್ದಾನೆ. ರಾಘವೇಂದ್ರ ಗಾಣಿಗ ಕುಂದಾಪುರದ ಖಾಸಗಿ ಶ್ರೀಮಾತಾ ಆಸ್ಪತ್ರೆಗೆ ತನ್ನ ತಾಯಿಯ ಜೊತೆ ಬಂದಿದ್ದ.
ಕಳೆದ ಹತ್ತು ವರ್ಷದಿಂದ ಮಾನಸಿಕ ತೊಂದರೆಯಿಂದ ಬಳಲುತ್ತಿರುವ ರಾಘವೇಂದ್ರ ನಿರಂತರ ಚಿಕಿತ್ಸೆ ಪಡೆಯುತ್ತಿದ್ದಾನೆ. ಕುಂದಾಪುರದ ಖಾಸಗಿ ಸಂಸ್ಥೆಯಲ್ಲಿ ಶಿಕ್ಷಕನಾಗಿದ್ದ ರಾಘವೇಂದ್ರ ಎಂಟು ವರ್ಷಗಳ ಹಿಂದೆ ಮಾನಸಿಕ ಸಮಸ್ಯೆಯಿಂದ ಕೆಲಸದಿಂದ ವಜಾಗೊಂಡಿದ್ದ. ಪೊಲೀಸರು ರಾಘವೇಂದ್ರನನ್ನು ದಸ್ತಗಿರಿ ಮಾಡುತ್ತಿದ್ದಂತೆ ಆಸ್ಪತ್ರೆಯಿಂದ ತಾಯಿ ಪೊಲೀಸ್ ಠಾಣೆಗೆ ಬಂದಿದ್ದಾರೆ. ತಾನು ತನ್ನ ಮಗನನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಬಂದಿದ್ದೆ. ಆತನಿಗೆ ಮಾನಸಿಕ ಸಮಸ್ಯೆ ಇದೆ. ಸಾಲಿನಲ್ಲಿ ನಿಂತಿದ್ದಾಗ ತಪ್ಪಿಸಿಕೊಂಡು ಓಡಿದ್ದಾನೆ ಎಂದು ಪೊಲೀಸರಿಗೆ ಹೇಳಿದ್ದಾರೆ.
ರಾಘವೇಂದ್ರನನ್ನು ವಿಚಾರಣೆ ನಡೆಸುತ್ತಿರುವ ಪೊಲೀಸರು ಆತನ ಮಾನಸಿಕ ಸ್ಥಿತಿಯ ಬಗ್ಗೆ ಅವಲೋಕನ ಮಾಡುತ್ತಿದ್ದಾರೆ. ಮಾನಸಿಕ ತಜ್ಞರನ್ನು ಪೊಲೀಸರು ಸಂಪರ್ಕ ಮಾಡಿದ್ದು ರಾಘವೇಂದ್ರನನ್ನು ಚಿಕಿತ್ಸೆಗೆ ಒಳಪಡಿಸುವ ಸಾಧ್ಯತೆ ಇದೆ. ಪೊಲೀಸ್ ವಶದಲ್ಲಿರುವ ರಾಘವೇಂದ್ರ ನಿರಂತರವಾಗಿ ಮನೆಯಲ್ಲಿ ಸುದ್ದಿವಾಹಿನಿಗಳನ್ನು ನೋಡುತ್ತಿದ್ದ ಎಂದು ತಾಯಿ ಪೊಲೀಸರ ಬಳಿ ಹೇಳಿಕೊಂಡಿದ್ದಾರೆ. ಸುದ್ದಿ ವಾಹಿನಿಗಳಲ್ಲಿ ಸಿಎಎ ಹೋರಾಟ, ಅಮೂಲ್ಯಾ ರಂಪಾಟ, ಆದ್ರ್ರಾ ಚೀರಾಟವನ್ನು ಕಂಡ ರಾಘವೇಂದ್ರ ಅದೇ ಮನೋಸ್ಥಿತಿಗೆ ಹೊರಳಿದ್ದ ಎನ್ನಲಾಗಿದೆ.