ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದ್ದು, ಮಂಗಳವಾರ ನಗರದಾದ್ಯಂತ ಪ್ಲಾಸ್ಟಿಕ್ ಮಾರಾಟ ಮಳಿಗೆ ಹಾಗೂ ಉತ್ಪಾದನಾ ಘಟಕಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಲಾಗಿದೆ.
ನಗರದಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಗೆ ಅವಕಾಶವಿಲ್ಲ. ಹೀಗಾಗಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ನಿಲ್ಲಿಸುವ ಕಾರ್ಯವನ್ನು ಆಯಾ ವಲಯ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರು ವಲಯವಾರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪಾಲಿಕೆಯ ಎಂಟೂ ವಲಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುವ ಮಳಿಗೆಗಳಿಗೆ ವಲಯ ಮಾರ್ಷಲ್ ಮೇಲ್ವಿಚಾರಕ, ವಿಭಾಗದ ಮೇಲ್ವಿಚಾರಕ, ಸಕಾಯಕ ಕಾರ್ಯಪಾಲಕ ಇಂಜಿನಿಯರ್, ಕಿರಿಯ ಆರೋಗ್ಯ ನಿರೀಕ್ಷಕ ಹಾಗೂ ಮಾರ್ಷಲ್ಗಳ ತಂಡ ಅನಿರೀಕ್ಷಿತ ಭೇಟಿ ನೀಡಿದ್ದಾರೆ. ಒಮ್ಮೆ ಬಳಸುವ ಪ್ಲಾಸ್ಟಿಕ್ ಮಾರಾಟ ಅಥವಾ ಉತ್ಪಾದನೆ ಕಂಡುಬಂದರೆ ಅದನ್ನು ವಶಪಡಿಸಿಕೊಂಡು ದಂಡ ವಿಧಿಸುವ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: ಅನಧಿಕೃತ ಬ್ಯಾನರ್, ಫ್ಲೆಕ್ಸ್, ಪೋಸ್ಟರ್ಸ್, ಬಂಟಿಂಗ್ಸ್ ಅಳವಡಿಸುವವರ ವಿರುದ್ಧ FIR
ಸೊಮವಾರ ದಕ್ಷಿಣ ವಲಯ ಪದ್ಮನಾಭನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಉತ್ಪಾದಿಸುವ ಎರಡು ಘಟಕಗಳಿಗೆ ಅನಿರೀಕ್ಷಿತ ಭೇಟಿ ನೀಡಿದ್ದಾರೆ. ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವುದರ ಜೊತೆಗೆ ದಂಡ ವಿಧಿಸಿದ್ದಾರೆ. ಈ ಪೈಕಿ ಸುಬ್ರಮಣ್ಯಪುರ ಮುಖ್ಯ ರಸ್ತೆಯಲ್ಲಿರುವ ಅಗ್ರಿ ಎಂಟರ್ಪ್ರೈಸೆಸ್ ಘಟಕಕ್ಕೆ ಅನಿರೀಕ್ಷಿತ ಭೇಟಿ ನೀಡಿ 200 ಕೆಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ. ಪದ್ಮನಾಭ ನಗರ ವಾರ್ಡ್ನ ಗೌಡನಪಾಳ್ಯ ಬಳಿಯಿರುವ ಗ್ರೇಸ್ ಪಾಲಿಮರ್ಸ್ ಘಟಕದಲ್ಲೂ ನಿಷೇಧಿತ ಪ್ಲಾಸ್ಟಿಕ್ ಬಳಕೆ ಕಂಡು ಬಂದಿದ್ದು 25 ಸಾವಿರ ರೂ. ದಂಡ ವಿಧಿಸಲಾಗಿದೆ. ಇದನ್ನೂ ಓದಿ: ಬೇಟೆಯಾಡಿ ಮಾಂಸ ಬೇಯಿಸುತ್ತಿದ್ದ ಬೇಟೆಗಾರರು-ಬಾಡು ಸವಿಯುವ ಮುನ್ನವೇ ಅಂದರ್!
ಮಾರ್ಷಲ್ ಗಳಿಂದ ತಪಾಸಣೆ ಹಾಗೂ ಜಾಗೃತಿ:
ನಗರದಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಕೆ ಬದಲು ಪುನರ್ ಬಳಕೆ ಮಾಡಬಹುದಾದ ಬಟ್ಟೆ ಬ್ಯಾಗ್, ನಾರಿನ ಬ್ಯಾಗ್, ಪೇಪರ್ನಿಂದ ತಯಾರಿಸಿದ ಕವರ್ ಬಳಸುವ ಬಗ್ಗೆ ಮಾರಾಟಗಾರರು ಹಾಗೂ ನಾಗರೀಕರಲ್ಲಿ ಜಾಗೃತಿ ಮೂಡಿಸಬೇಕು. ನಗರದಲ್ಲಿ ಯಾರಾದರೂ ಒಮ್ಮೆ ಬಳಸುವ ಪ್ಲಾಸಿಕ್ ಬಳಕೆ ಮಾಡುವುದು ಕಂಡುಬಂದಲ್ಲಿ ಕಾನೂನು ರೀತಿಯ ಕ್ರಮ ಕೈಗೊಳ್ಳಲು ಎಲ್ಲಾ ವಲಯದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.