ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಕಾಶ್ಮೀರದಲ್ಲಿ 15ಕ್ಕೆ ತ್ರಿವರ್ಣ ಧ್ವಜ ಹಾರಿಸಲಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಅಮಿತ್ ಶಾ ಅವರು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸೂಕ್ತ ರಕ್ಷಣಾ ಕ್ರಮಕೈಗೊಳ್ಳಲು ಸಿದ್ಧತೆ ನಡೆಸಲಾಗಿದೆ ಎಂದು ಮಾಧ್ಯಮ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ ಈ ಬಗ್ಗೆ ಜಮ್ಮು ಕಾಶ್ಮೀರ ಪೊಲೀಸರಿಂದ ಯಾವುದೇ ಖಚಿತ ಮಾಹಿತಿ ಲಭಿಸಿಲ್ಲ. ಆದರೆ ಗೃಹ ಸಚಿವರ ಭೇಟಿಯನ್ನ ರಕ್ಷಣೆ ದೃಷ್ಟಿಯಿಂದ ಗೌಪ್ಯವಾಗಿಡಲಾಗಿದೆ ಎನ್ನಲಾಗಿದೆ.
ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಪಡಿಸಿದ ಬಳಿಕ ಗೃಹ ಸಚಿವರಾದ ಅಮಿತ್ ಶಾ ಅವರು ಮೊದಲ ಬಾರಿಗೆ ಭೇಟಿ ನೀಡುವ ನಿರೀಕ್ಷೆ ಇದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಕಾಶ್ಮೀರದ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.
ಇತ್ತ ಕಣಿವೆ ರಾಜ್ಯದಲ್ಲಿ ಸಹಜ ಸ್ಥಿತಿಗೆ ಮರಳಲು ಸ್ವಲ್ಪ ಸಮಯವಕಾಶ ಅವಶ್ಯವಾಗುತ್ತದೆ. ಎಲ್ಲವನ್ನೂ ಒಂದು ರಾತ್ರಿಯಲ್ಲಿ ಬದಲಿಸಲು ಸಾಧ್ಯವಿಲ್ಲ. ಇದು ಅತ್ಯಂತ ಸೂಕ್ಷ್ಮವಾದ ವಿಚಾರ. ಆರ್ಟಿಕಲ್ 370 ರದ್ದುಗೊಳಿಸಿದ ಬಳಿಕ ಜಮ್ಮು ಕಾಶ್ಮೀರದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಕಾನೂನು ಸುವ್ಯವಸ್ಥೆ ನೋಡಿಕೊಳ್ಳುವುದು ಪ್ರಮುಖ ವಿಚಾರವಾಗಿದ್ದು, ಇದು ಅತ್ಯಂತ ಸೂಕ್ಷ್ಮ ಹಾಗೂ ಗಂಭೀರ ವಿಚಾರವಾಗಿದೆ. ಹೀಗಾಗಿ ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಲ್ಲ ಸುಪ್ರೀಂ ಕೋರ್ಟ್ ಹೇಳಿದೆ.