ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರು ಹಿಂದೂಗಳ ಭಾವನೆ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಮಠಗಳ ಆಸ್ತಿ ವಶಪಡಿಕೊಳ್ಳಲು ಸುತ್ತೋಲೆ ಹೊರಡಿಸಿ ವಿರೋಧ ವ್ಯಕ್ತವಾದಾಗ ವಾಪಸ್ ಪಡೆಯುತ್ತಾರೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ವಾಗ್ದಾಳಿ ನಡೆಸಿದ್ದಾರೆ.
ದೆಹಲಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ತುಚ್ಛ ರಾಜಕೀಯ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ದೇವಸ್ಥಾನ ಮಠಗಳ ಆಸ್ತಿ ವಶಪಡಿಸಿಕೊಳ್ಳಲು ಸುತ್ತೋಲೆ ಹೊರಡಿಸಿ ವಿರೋಧ ವ್ಯಕ್ತವಾದಾಗ ಅದನ್ನು ವಾಪಾಸ್ ಪಡೆಯುತ್ತಾರೆ. ಈ ಮೂಲಕ ಬಹುಸಂಖ್ಯಾತ ಹಿಂದೂಗಳ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಆರೋಪ ಮಾಡಿದರು.
ಸಿಎಂ ಅವರಿಗೆ ಮಠ ಮಾನ್ಯಗಳನ್ನು ಒಡೆಯುವ ಉದ್ದೇಶವಿದ್ದು, ಮೂಢ ನಂಬಿಕೆ ನಿಷೇಧ ಕಾಯ್ದೆ ಬಗ್ಗೆ ಮಾತನಾಡುವವರು ಮಸೀದಿಗಳಲ್ಲಿ ತುಲಾಭಾರ ಮಾಡಿಸಿಕೊಳ್ಳುತ್ತಾರೆ. ಈ ಮೂಲಕ ಅನಾವಶ್ಯಕ ಗೊಂದಲ ಸೃಷ್ಠಿಸುತ್ತಿರುವುದು ಸಿಎಂ ಸ್ಥಾನಕ್ಕೆ ಶೋಭೆ ತರುವುದಿಲ್ಲ. ನಿಮಗೆ ತಾಕತ್ತಿದ್ದರೆ ಮಸೀದಿಗಳ ಭೂಮಿಯನ್ನು ವಾಪಸ್ ಪಡೆಯಿರಿ ಎಂದು ಸವಾಲು ಎಸೆದರು. ಇದನ್ನೂ ಓದಿ: ಯಾವುದೇ ಮಠಗಳನ್ನು ವಶಪಡಿಸಿಕೊಳ್ಳುವ ಉದ್ದೇಶ ಸರ್ಕಾರಕ್ಕಿಲ್ಲ: ಸಿಎಂ
ಇದೇ ವೇಳೆ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ಮೈಸೂರು ಸಂಸದ ಪ್ರತಾಪ್ ಸಿಂಹ, ಸಂಸದ ಭಗವಂತ್ ಖೂಬಾ, ನಳೀನ್ಕುಮಾರ್ ಕಟೀಲ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಂಸದ ಪ್ರತಾಪ್ ಸಿಂಹ ಅವರು ಮಾತನಾಡಿ ರಾಜ್ಯಸರ್ಕಾರ ನಮಗೆ ಹಿಂದೂಗಳ ಮತ ಬೇಡ ಎಂದು ಹೇಳಿಕೆ ನೀಡಲಿ. ಮುಂದಿನ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದರು. ಇದನ್ನೂ ಓದಿ: ಮತ್ತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಡಿಚ್ಚಿ