ಕೊಲಂಬೊ: ಹಿಂಸಾತ್ಮಕ ಸರ್ಕಾರ ವಿರೋಧಿ ಪ್ರತಿಭಟನೆಗಳನ್ನು ಕಂಡ ದ್ವೀಪರಾಷ್ಟ್ರ ಎದುರಿಸುತ್ತಿರುವ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಯುನೈಟೆಡ್ ನ್ಯಾಶನಲ್ ಪಾರ್ಟಿ (ಯುಎನ್ಪಿ) ನಾಯಕ ರಾನಿಲ್ ವಿಕ್ರಮಸಿಂಘೆ ಅವರು ಶ್ರೀಲಂಕಾದ ನೂತನ ಪ್ರಧಾನಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಐದು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ವಿಕ್ರಮಸಿಂಘೆ ಅವರಿಗೆ ಅಧ್ಯಕ್ಷ ಗೊಟಬಯ ರಾಜಪಕ್ಸ ಪ್ರಮಾಣ ವಚನ ಬೋಧಿಸಿದ್ದಾರೆ. ಶ್ರೀಲಂಕಾ ಪೊದುಜನ ಪೆರಮುನಾ (ಎಸ್ಎಲ್ಪಿಪಿ) ಸಂಸದರ ಬೆಂಬಲವನ್ನು ಪಡೆದುಕೊಂಡ ನಂತರ ವಿಕ್ರಮಸಿಂಘೆ ಅವರು ಪ್ರಧಾನಿ ಹುದ್ದೆ ಅಲಂಕರಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಹೊಸ ಸರ್ಕಾರ ರಚನೆಗೆ ವಿಪಕ್ಷ ನಾಯಕ ಒಪ್ಪಿಗೆ
ಶ್ರೀಲಂಕಾದ ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಅವರು ಯುನೈಟೆಡ್ ನ್ಯಾಶನಲ್ ಪಾರ್ಟಿ (ಯುಎನ್ಪಿ) ನಾಯಕ ರಾನಿಲ್ ವಿಕ್ರಮಸಿಂಘೆ ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡಿದರೆ ನಮ್ಮ ಪಕ್ಷವು ಕಾರ್ಯತಂತ್ರ ರೂಪಿಸುವುದಾಗಿ ತಿಳಿಸಿದ್ದರು.
ಸಜಿತ್ ಅವರು ಅಧ್ಯಕ್ಷ ಗೊಟಬಯ ರಾಜಪಕ್ಸ ಅವರಿಗೆ ಪತ್ರ ಬರೆದಿರುವುದಾಗಿ ಸಜಿತ್ ಹೇಳಿಕೊಂಡಿದ್ದರು. ಅದರಲ್ಲಿ ತಮ್ಮ ಪಕ್ಷವು ಮುಂದಿಟ್ಟಿರುವ ಬೇಡಿಕೆಗಳನ್ನು ಈಡೇರಿಸಿದರೆ ಪ್ರಧಾನಿ ಹುದ್ದೆಯನ್ನು ವಹಿಸಿಕೊಳ್ಳುತ್ತೇವೆ ಎಂದು ಹೇಳಿದ್ದರು. ಇದನ್ನೂ ಓದಿ: ಹೆಣ್ಣುಮಕ್ಕಳಿಗೆ ಶಿಕ್ಷಣ ನಿಷೇಧಿಸಿ ತನ್ನ ಪುತ್ರಿಯರನ್ನು ಶಾಲೆಗೆ ಸೇರಿಸಿದ ತಾಲಿಬಾನ್ ವಕ್ತಾರ
ವಿಕ್ರಮಸಿಂಘೆ ಕುರಿತು ಕೇಳಿದ್ದ ಪ್ರಶ್ನೆಗೆ ಈ ಮೊದಲು ಪ್ರತಿಕ್ರಿಯಿಸಿದ್ದ ಸಜಿತ್, ಊಹಾಪೋಹಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಒಂದು ವೇಳೆ ಅದು ಸಾಧ್ಯವಾದರೆ, ನಾವು ಶೀಘ್ರದಲ್ಲೇ ನಮ್ಮ ಕಾರ್ಯತಂತ್ರ ಪ್ರಾರಂಭಿಸುತ್ತೇವೆ. ನಾವು ದೇಶದ ಅತಿದೊಡ್ಡ ವಿರೋಧ ಪಕ್ಷವಾಗಿದ್ದು, ದೇಶದ ರಾಜಕೀಯ ವ್ಯವಸ್ಥೆ ನಮಗೆ ತಿಳಿದಿದೆ ಎಂದು ಹೇಳಿದ್ದರು.
ಆರ್ಥಿಕ ಬಿಕ್ಕಟ್ಟಿನಿಂದಾಗಿ ದೇಶದಲ್ಲಿ ಹೋರಾಟ ತೀವ್ರಗೊಂಡಿದೆ. ಸರ್ಕಾರಿ ಬೆಂಬಲಿತರನ್ನು ಗುರಿಯಾಗಿಸಿ ಪ್ರತಿಭಟನಾಕಾರರು ಹಿಂಸಾಚಾರ ತೀವ್ರಗೊಳಿಸಿದ್ದರು. ಇದರಿಂದ ಎಚ್ಚೆತ್ತ ಮಹಿಂದಾ ರಾಜಪಕ್ಸ ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.