ಬೆಂಗಳೂರು: ಮೈತ್ರಿ ಸರ್ಕಾರ 14 ಶಾಸಕರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರ ಉಳಿಸುವ ಪ್ರಯತ್ನಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರನ್ನು ಹೈಕಮಾಂಡ್ ಬೆಂಗಳೂರಿಗೆ ಕಳುಹಿಸಿ ಕೊಟ್ಟಿದೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ನಾಯಕರೊಂದಿಗೆ ವೇಣುಗೋಪಾಲ್ ಚರ್ಚೆ ನಡೆಸಿದ್ದಾರೆ.
ಈ ಚರ್ಚೆ ವೇಳೆ ಸಿದ್ದರಾಮಯ್ಯ ಅವರು ಖಡಕ್ ಸಂದೇಶ ನೀಡಿದ್ದಾರೆ ಎನ್ನಲಾಗಿದ್ದು, ಮೈತ್ರಿ ಸರ್ಕಾರವನ್ನು ಮುಂದುವರಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆ ಆಗಲಿದೆ. ಸಿಎಂ ಹಾಗೂ ಡಿಸಿಎಂ ಅವರು ಬೇಕಾದರೆ ಸರ್ಕಾರ ಉಳಿಸಿಕೊಳ್ಳಲು ಪ್ರಯತ್ನಿಸಲಿ ನನ್ನಿಂದ ಆಗಲ್ಲ ಎಂದು ಹೇಳಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ವೇಣುಗೌಪಾಲ್ ಅವರೊಂದಿಗೆ ಖಡಕ್ ಮಾಹಿತಿ ನೀಡಿರುವ ಸಿದ್ದರಾಮಯ್ಯ ಅವರು, ಪರಿಸ್ಥಿತಿ ಕೈಮೀರಿ ಹೋಗಿದ್ದು, ಮೈತ್ರಿ ಮುರಿದುಕೊಳ್ಳುವುದೇ ಉತ್ತಮ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಈ ಹಿಂದೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದ ಸಿದ್ದರಾಮಯ್ಯ ಅವರು ಅಂದು ಕೂಡ ನೇರವಾಗಿ ರಾಹುಲ್ ಅವರ ಮುಂದೆಯೇ ಮೈತ್ರಿ ಅಂತ್ಯಗೊಳಿಸುತ್ತಿರುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅಲ್ಲದೇ ದೆಹಲಿಯ ಪ್ರಮುಖ ಕಾಂಗ್ರೆಸ್ ನಾಯಕರಿಗೂ ವರದಿಯನ್ನು ಸಿದ್ದರಾಮಯ್ಯ ಅವರು ನೀಡಿದ್ದರು. ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ಭಾರೀ ಹೊಡೆತ ಬೀಳುತ್ತಿದೆ. ಮತ್ತೆ ಪಕ್ಷವನ್ನು ಸಂಘಟನೆ ಮಾಡುವುದು
ಅಸಾಧ್ಯವಾಗಲಿದೆ. ಪಕ್ಷ ಒಡೆದು ಹೋಗುವ, ಬೇರೆ ಬೇರೆ ಸಮಸ್ಯೆಗಳು ಎದುರಾಗಲಿದೆ ಎಂದು ವರದಿಯಲ್ಲಿ ತಿಳಿಸಿದ್ದರು. ಆದರೆ ಅಂದು ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರ ಮಾತಿಗೆ ಮಣೆ ಹಾಕಿರಲಿಲ್ಲ.
ಆಪ್ತ ಶಾಸಕರೇ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಅಸಹಾಯಕರಾಗಿದ್ದಾರೆ. ಶಾಸಕರ ರಾಜೀನಾಮೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಸಿದ್ದರಾಮಯ್ಯ ಅವರು, ಶಾಸಕರ ಮನವೊಲಿಕೆಗೆ ಡಿಕೆ ಶಿವಕುಮಾರ್ ಅವರು ತೆರಳಿದ್ದಾರೆ. ಕಾದು ನೋಡೋಣ. ನಾನು ಶಾಸಕರಿಗೆ ಕರೆ ಮಾಡಿದ್ದೆ, ಆದರೆ ಶಾಸಕರ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ತಿಳಿಸಿದ್ದರು.