ಬೀದರ್: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರ ಹಿರಿಯ ಸಹೋದರ, ಮಾಜಿ ಶಾಸಕ ವಿಜಯಕುಮಾರ್ ಖಂಡ್ರೆ ಅವರ ಅಂತ್ಯಕ್ರಿಯೆ ಇಂದು ಭಾಲ್ಕಿಯ ಶಾಂತಿಧಾಮದಲ್ಲಿ ನೇರವೇರಿತು.
ಲಿಂಗಾಯತ ವೀರಶೈವ ವಿಧಿ ವಿಧಾನಗಳ ಪ್ರಕಾರ ಭಾಲ್ಕಿ ಹೀರೆಮಠ ಸಂಸ್ಥಾನದ ಬಸವಲಿಂಗ ಪಟ್ಟದ್ದೆವರು ಅವರು ವಿಜಯಕುಮಾರ್ ಖಂಡ್ರೆ ಅವರ ಅಂತ್ಯಕ್ರಿಯೆ ನೆರವೇರಿಸಿದರು. ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ರಾಜಶೇಖರ ಪಾಟೀಲ್, ರಹೀಂಖಾನ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ಅಂತಿಮ ದರ್ಶನ ಪಡೆದು, ಅಂತ್ಯಕ್ರಿಯೆಯಲ್ಲಿ ಭಾಗಿಯಾದರು.
ವಿಜಯಕುಮಾರ್ ಖಂಡ್ರೆ ಅವರ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ಇಂದು ನಡೆಯುತ್ತಿದ್ದರಿಂದ ಭಾಲ್ಕಿ ಸ್ತಬ್ಧವಾಗಿತ್ತು. ಪಟ್ಟಣದ ಅನೇಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿ, ಮಾಜಿ ಶಾಸಕರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಕಂಬನಿ ಮಿಡಿದರು.
ಎರಡು ಬಾರಿ ಭಾಲ್ಕಿ ಶಾಸಕರಾಗಿ ವಿಜಯಕುಮಾರ್ ಅವರು ಆಯ್ಕೆಯಾಗಿದ್ದರು. ಭಾಲ್ಕಿ ಕ್ಷೇತ್ರದಲ್ಲಿ ಇವರು ಬಹಳಷ್ಟು ಕೆಲಸಗಳನ್ನು ಮಾಡಿ ಹೆಸರುವಾಸಿಯಾಗಿದ್ದರು. ಸುಮಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಅವರಿಗೆ ನಿನ್ನೆ ತೀವ್ರ ಹೃದಯಾಘಾತ ಸಂಭವಿಸಿತ್ತು. ತಕ್ಷಣವೇ ಅವರನ್ನು ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.