– ಮಾಜಿ ಸಿಎಂಗೆ ಬೆಳ್ಳಿ ಖಡ್ಗ ಗಿಫ್ಟ್
ವಿಜಯಪುರ: ಸಂವಿಧಾನದ ಮೇಲೆ ಬಿಜೆಪಿಯವರಿಗೆ ನಂಬಿಕೆ ಇಲ್ಲ. ಹೀಗಾಗಿ ಆಪರೇಷನ್ ಆಡಿಯೋ ಪ್ರಕರಣವನ್ನು ಎಸ್ಐಟಿ ತನಿಖೆಗೆ ನೀಡಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನಗರದಲ್ಲಿ ನೂತನವಾಗಿ ನಿರ್ಮಾಣವಾದ ಪಂಚಮಸಾಲಿ ಸಮಾಜದ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಪರೇಷನ್ ಕಮಲ ಆಡಿಯೋ ಪ್ರಕರಣ ತನಿಖೆಗೆ ಸಿಎಂ ಕುಮಾರಸ್ವಾಮಿ ಅವರು ಎಸ್ಐಟಿ ತಂಡವನ್ನು ರಚನೆ ಮಾಡಿದ್ದಾರೆ. ನಾವು ಯಾರು ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ತನಿಖೆಯ ಬಳಿಕ ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತದೆ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು.
ಅತೃಪ್ತ ಕಾಂಗ್ರೆಸ್ ಶಾಸಕರ ಅನರ್ಹತೆ ಬಗ್ಗೆ ಸ್ಪೀಕರ್ ರಮೇಶ್ ಕುಮಾರ್ ಅವರು ಕ್ರಮಕೈಗೊಳ್ಳುತ್ತಾರೆ. ನಾನು ಸಲ್ಲಿಸಿದ ಮನವಿಯನ್ನು ವಾಪಾಸ್ ಪಡೆಯಲ್ಲ. ಸಮಿಶ್ರ ಸರ್ಕಾರ ಸುಭದ್ರವಾಗಿದೆ. ಕಾಂಗ್ರೆಸ್ ಶಾಸಕರು ಪಕ್ಷ ಬಿಡುವುದಿಲ್ಲ ಎಂದ ಅವರು, ಲೋಕಸಭಾ ಸೀಟುಗಳ ಹಂಚಿಕೆ ವಿಚಾರವಾಗಿ ಜೆಡಿಎಸ್ ಜೊತೆಗೆ ಮಾತುಕತೆಯಾಗಿಲ್ಲ ಎಂದರು.
ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ಮೆದುಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಹೀಗಾಗಿ ಏನೇನೋ ಮಾತನಾಡುತ್ತಾರೆ. ಅವರಿಗೆ ಗಂಭೀರವಾಗಿ ಮಾತನಾಡುವುದು ಗೊತ್ತಿಲ್ಲ ಎಂದು ತೀರುಗೇಟು ನೀಡಿದರು. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಬೆಳ್ಳಿ ಖಡ್ಗ ಹಾಗೂ ಕಿತ್ತೂರು ರಾಣಿ ಚೆನ್ನಮ್ಮನ ಮೂರ್ತಿಯನ್ನು ಉಡುಗೊರೆಯಾಗಿ ನೀಡಲಾಯಿತು.
ವಿಜಯಪುರ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಕಿತ್ತೂರು ರಾಣಿ ಚೆನ್ನಮ್ಮ ಸಮುದಾಯ ಭವನದ ಉದ್ಘಾಟನೆಯನ್ನು ನೆರವೇರಿಸಿದೆ. pic.twitter.com/q7QxcRf5qr
— Siddaramaiah (@siddaramaiah) February 17, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv