ಬೀದರ್: ಕ್ರೂರಿ ತಾಯಿಯೊಬ್ಬಳು ರಸ್ತೆಯಲ್ಲೇ ಬಿಟ್ಟು ಹೋಗಿದ್ದ ನವಜಾತ ಶಿಶುವನ್ನು ನಾಯಿಗಳ ದಾಳಿಯಿಂದ ಗ್ರಾಮಸ್ಥರು ರಕ್ಷಣೆ ಮಾಡಿದ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಕಮಲಾನಗರ ತಾಲೂಕಿನ ಡೋಣಗಾಂವ್ ಗ್ರಾಮದಲ್ಲಿ ಶ್ವಾನಗಳಿಗೆ ಬಲಿಯಾಗುತ್ತಿದ್ದ ನವಜಾತ ಶಿಶುವನ್ನು ರಕ್ಷಿಸಿ ಗ್ರಾಮಸ್ಥರು ಮಾನವೀಯತೆ ಮೆರೆದಿದ್ದಾರೆ. ಹೆಣ್ಣು ಶಿಶು ಎಂಬ ಕಾರಣಕ್ಕೆ ಕ್ರೂರಿ ತಾಯಿ ಮಗುವನ್ನು ರಸ್ತೆಯಲ್ಲೇ ಬಿಟ್ಟು ಪರಾರಿಯಾಗಿದ್ದಾಳೆ. ರಸ್ತೆ ಮೇಲೆ ರಕ್ತಸಿಕ್ತ ಸ್ಥಿತಿಯಲ್ಲಿದ್ದ ಮಗುವನ್ನು ನಾಯಿಗಳು ಕಚ್ಚುತ್ತಿದ್ದವು. ಇದನ್ನು ಗಮನಿಸಿದ ಗ್ರಾಮಸ್ಥರು ನಾಯಿಗಳಿಂದ ಶಿಶುವನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಶಿಶುವಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಶಿಶು ಆರೋಗ್ಯವಾಗಿದೆ. ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣು ತನ್ನನ್ನು ತಾನು ಗುರುತಿಸಿಕೊಳ್ಳುತ್ತಿದ್ದಾಳೆ. ಆದರೆ ಈಗಲೂ ಹೆಣ್ಣು ಶಿಶುಗಳ ಮಾರಣಹೋಮ ನಡೆಯುತ್ತಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ.
ಹೆಣ್ಣು ಮಗು ಹುಟ್ಟಿದರೆ ನಮಗೆ ಹೊರೆ ಎಂದು ಪ್ರತಿಕ್ರಿಯೆ ನೀಡುವ ಕ್ರೂರಿಗಳಿಗೆ ಎಷ್ಟೇ ಅರಿವು ನೀಡಿದರು ಬದಲಾಗುತ್ತಿಲ್ಲ. ಬೀದರ್ ನ ಈ ಕ್ರೂರಿ ತಾಯಿ ನಡೆಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಇನ್ನು ಮುಂದೆಯಾದರು ಈ ರೀತಿಯ ಘಟನೆಗಳು ಮರುಕಳಿಸದೆ ಇರಲಿ ಎಂಬುವುದೇ ಪ್ರಜ್ಞಾವಂತ ಸಮಾಜದ ಕಳಕಳಿಯಾಗಿದೆ. ಕಮಲಾನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.