ಹಾವೇರಿ: ಕಲ್ಲು ಕ್ವಾರಿ ಪರವಾನಗಿ (ಲೈಸೆನ್ಸ್ಗೆ) ನಿಯಮಗಳನ್ನ ಉಲ್ಲಂಘಿಸಿದ ಆರೋಪದ ಹಿನ್ನೆಲೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಲ್ಲು ಕ್ವಾರಿ ಮಾಲೀಕರಾದ ರುದ್ರಪ್ಪ ಲಮಾಣಿ (Rudrappa Lamani) ಅವರಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ 3 ಕೋಟಿ ರೂ. ದಂಡ ವಿಧಿಸಿದೆ.
ಹಾವೇರಿ (Haveri) ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹುಣಸಿಕಟ್ಟಿ ಬಳಿ ಇರುವ ಕಲ್ಲು ಕ್ವಾರಿಗೆ ಸಂಬಂಧಿಸಿದಂತೆ ದಂಡ ವಿಧಿಸಲಾಗಿದೆ. ನಿಗದಿಪಡಿಸಿದ ವ್ಯಾಪ್ತಿ ಮೀರಿ ಹೆಚ್ಚುವರಿಯಾಗಿ ಕಲ್ಲು ತೆಗೆದಿರುವುದು ಹಾಗೂ ಕ್ವಾರಿ ಸುತ್ತಮುತ್ತಲಿನ ಜಾಗವನ್ನ ಒತ್ತುವರಿ ಮಾಡಿಕೊಂಡು ಕಲ್ಲು ಗಣಿಗಾರಿಕೆ ನಡೆಸಿರುವುದು ನಿಯಮ ಉಲ್ಲಂಘನೆ ಎಂದು ಇಲಾಖೆ ನೋಟಿಸ್ನಲ್ಲಿ ಉಲ್ಲೇಖಿಸಿದೆ.
ಡ್ರೋಣ್ ಮೂಲಕ ಸಮೀಕ್ಷೆ
ಕಲ್ಲು ಕ್ವಾರಿ ಪ್ರದೇಶದಲ್ಲಿ ನಿಯಮ ಉಲ್ಲಂಘನೆಯಾಗಿದೆಯೇ ಎಂಬುದನ್ನ ಪರಿಶೀಲಿಸಲು ಡ್ರೋಣ್ ಮೂಲಕ ಸಮೀಕ್ಷೆ ನಡೆಸಲಾಗಿದೆ. ಕರ್ನಾಟಕ ರಿಮೋಟ್ ಸೆನ್ಸಿಂಗ್ ಅಪ್ಲಿಕೇಶನ್ಸ್ ಸೆಂಟರ್ (KRSAC) ಮೂಲಕ ನಡೆಸಲಾದ ಸಮೀಕ್ಷೆಯ ಆಧಾರದ ಮೇಲೆ ನಿಯಮ ಉಲ್ಲಂಘನೆಗಳನ್ನು ಗುರುತಿಸಿದೆ. ಈ ಹಿನ್ನೆಲೆ ಕಲ್ಲು ಕ್ವಾರಿ ಹಾಗೂ ಕ್ರಷರ್ ಮಾಲೀಕರಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ದಂಡ ವಿಧಿಸಿದೆ.

ಹಾವೇರಿ ಜಿಲ್ಲೆಯಲ್ಲಿ 60ಕ್ಕೂ ಹೆಚ್ಚು ಕಲ್ಲು ಕ್ವಾರಿ ಮಾಲೀಕರಿಗೆ ದಂಡ ವಿಧಿಸಲಾಗಿದೆ. ಈ ಪಟ್ಟಿಯಲ್ಲಿ ಸಚಿವ ರುದ್ರಪ್ಪ ಲಮಾಣಿ ಅವರ ಕಲ್ಲು ಕ್ವಾರಿಯೂ ಸೇರಿದೆ.
6 ತಿಂಗಳ ಗಡುವು
ದಂಡದ ಮೊತ್ತ ಪಾವತಿಸುವಂತೆ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಇಲಾಖೆ ನೋಟಿಸ್ ಜಾರಿ ಮಾಡಿದ್ದು, ಪಾವತಿಗೆ 6 ತಿಂಗಳ ಕಾಲಾವಕಾಶ ನೀಡಲಾಗಿದೆ. ಒಟ್ಟು 3 ಕೋಟಿ ರೂ. ದಂಡವನ್ನ ಮೂರು ಕಂತುಗಳಲ್ಲಿ ಪಾವತಿಸುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ಪರವಾನಗಿ ನಿಯಮಗಳ ಪ್ರಕಾರ ನಿಗದಿಪಡಿಸಿದ ವ್ಯಾಪ್ತಿಯಲ್ಲೇ ಕಲ್ಲು ತೆಗೆಯಬೇಕಾಗಿದ್ದರೂ, ಹೆಚ್ಚುವರಿ ಪ್ರದೇಶದಲ್ಲಿ ಕಲ್ಲು ತೆಗೆದಿರುವುದು ಮತ್ತು ಅಕ್ಕಪಕ್ಕದ ಜಾಗವನ್ನ ಒತ್ತುವರಿ ಮಾಡಿಕೊಂಡು ಗಣಿಗಾರಿಕೆ ನಡೆಸಿರುವುದು ದಂಡ ವಿಧಿಸಲು ಕಾರಣವಾಗಿದೆ ಎಂದು ಇಲಾಖೆ ತಿಳಿಸಿದೆ.
ಈ ಕುರಿತು ಹಾವೇರಿ ಜಿಲ್ಲಾ ಕ್ರಷರ್ಸ್ ಹಾಗೂ ಕ್ವಾರಿ ಓನರ್ಸ್ ಅಸೋಸಿಯೇಷನ್ ಅಧ್ಯಕ್ಷ ವರಾಜ ಬೆಳವಡಿ ಪ್ರತಿಕ್ರಿಯಿಸಿದ್ದು, ʻಸಚಿವ ರುದ್ರಪ್ಪ ಲಮಾಣಿ ಅವರಿಗೂ 3 ಕೋಟಿ ರೂ. ದಂಡ ಬಂದಿದೆ. ಅವರು ಮಂತ್ರಿಗಳಾಗಿದ್ದು, ಈ ವಿಚಾರವಾಗಿ ಮುಖ್ಯಮಂತ್ರಿಗಳ ಬಳಿ ಮಾತನಾಡಲು ಸಾಧ್ಯವಾಗುತ್ತಿಲ್ಲ. ನಾವು ಹೋರಾಟ ನಡೆಸಿದ ಬಳಿಕವಷ್ಟೇ ಈ ವಿಚಾರಗಳು ಬಯಲಿಗೆ ಬರುತ್ತಿವೆ ಎಂದು ಅವರು ಹೇಳಿದ್ದಾರೆ.
ನಿಯಮ ಉಲ್ಲಂಘನೆಯಾಗಿರುವುದು ತಪ್ಪು ಎಂದು ಅವರೂ ಒಪ್ಪಿಕೊಂಡಿದ್ದಾರೆ. ಆದರೆ ಸರ್ಕಾರ ಅವರದ್ದೇ ಆಗಿರುವುದರಿಂದ ರುದ್ರಪ್ಪ ಲಮಾಣಿ ಅವರು ಈ ವಿಚಾರದಲ್ಲಿ ಅಸಹಾಯಕರಾಗಿದ್ದಾರೆ ಎಂದು ವರಾಜ ಬೆಳವಡಿ ಆರೋಪಿಸಿದ್ದಾರೆ.

