ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44ರ ಅಗಲಗುರ್ಕಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಐಷಾರಾಮಿ ವೋಲ್ವೋ ಬಸ್ (Volvo Bus) ಕಂಟೇನರ್ಗೆ (Container) ಡಿಕ್ಕಿ ಹೊಡೆದು ಟೆಕ್ಕಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹೈದರಾಬಾದ್ನಿಂದ ಬೆಂಗಳೂರಿನತ್ತ ಬರುತ್ತಿದ್ದ ಖಾಸಗಿ ವೋಲ್ವೋ ಬಸ್, ಮುಂಭಾಗದಲ್ಲಿ ಸಂಚರಿಸುತ್ತಿದ್ದ ಕಂಟೇನರ್ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ಪಕ್ಕದ ಬಸ್ ಮುಂಭಾಗದ ಬಾಗಿಲಿನ ಬಳಿ ಕೂತಿದ್ದ ಅನಂತಪುರ ಜಿಲ್ಲೆಯ ಚಿಲ್ಲಮತ್ತೂರು ಮೂಲದ ಸುಮಾರು 28 ವರ್ಷದ ಕೌಸರ್ ತಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಮೃತದೇಹ ಬಸ್ನ ಕಬ್ಬಿಣದ ಅವಶೇಷಗಳ ನಡುವೆ ಸಿಲುಕಿಕೊಂಡಿದ್ದರಿಂದ, ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಕ್ರೇನ್ ಸಹಾಯದಿಂದ ಬಸ್ನ ಮುಂಭಾಗವನ್ನು ತೆರವುಗೊಳಿಸಿ ಮೃತದೇಹವನ್ನು ಹೊರತೆಗೆದರು. ಇದನ್ನೂ ಓದಿ: ಸಚಿವ ಸ್ಥಾನ ಸಿಗದಿದ್ದಕ್ಕೆ ಪ್ರಿಯಾಕೃಷ್ಣ ಬೆಂಬಲಿಗರ ತೀವ್ರ ಆಕ್ರೋಶ
ಬಳಿಕ ಶವವನ್ನು ಚಿಕ್ಕಬಳ್ಳಾಪುರ (Chikkaballapura) ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಯಿತು. ಮೃತ ಯುವತಿ ಕೊಡಿಕೊಂಡ ಚೆಕ್ಪೋಸ್ಟ್ ಬಳಿ ಬಸ್ ಹತ್ತಿದ್ದು, ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಬಸ್ಸಿನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದು, ಉಳಿದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಪರಿಣಾಮ ಕೆಲಕಾಲ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಚಾರವನ್ನು ಸುಗಮಗೊಳಿಸಿದರು. ಇದನ್ನೂ ಓದಿ: ಎಲ್ಲರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಅಭಿವೃದ್ಧಿ ಮಾಡುತ್ತೇನೆ: ರುದ್ರಪ್ಪ ಲಮಾಣಿ
