ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್ ಕಂಟ್ರೋಲ್ ಆಗುವವರೆಗೆ ದಂಧೆಕೋರರ ವಿರುದ್ಧ ಸಮರ ನಡೆಯಲಿದೆ ಎಂದು ಗೃಹ ಸಚಿವ ಪರಮೇಶ್ವರ್ (Paremshwar) ತಿಳಿಸಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ (Congress) ಸದಸ್ಯ ಅಬ್ದುಲ್ ಜಬ್ಬರ್ ಪ್ರಶ್ನೆಗೆ ಉತ್ತರ ನೀಡಿದ ಅವರು, ಮಾದಕ ವಸ್ತುಗಳ ಉತ್ಪಾದನೆ, ಮಾರಾಟ ಮತ್ತು ಅವುಗಳ ಬಳಕೆ ಜಾಗತಿಕವಾಗಿ ದಿನೇ ದಿನೇ ಹೆಚ್ಚುತ್ತಿದೆ. ಮಾದಕ ವಸ್ತುಗಳ ಮಾರಾಟವು ಮಾರಾಟಗಾರರಿಗೆ ಅತೀ ಹೆಚ್ಚಿನ ಲಾಭಾಂಶ ತರುವ ಉದ್ಯಮವಾಗಿ ಪರಿವರ್ತನೆಯಾಗಿದೆ. ಅತೀ ಹೆಚ್ಚಿನ ಲಾಭಕ್ಕಾಗಿ ಅಂತರ್ ರಾಜ್ಯ/ ಅಂತರ್ ರಾಷ್ಟ್ರೀಯ ಜಾಲಗಳು ಕಾರ್ಯನಿರ್ವಹಿಸುತ್ತಿವೆ. ಈ ಜಾಲಗಳು ಜಗತ್ತಿನಾದ್ಯಾಂತ ಬಹುತೇಕ ಎಲ್ಲಾ ರಾಷ್ಟ್ರಗಳಲ್ಲಿ ಸಕ್ರಿಯವಾಗಿರುವುದರಿಂದ ಈ ಡಗ್ಸ್ ಸಮಸ್ಯೆಯು ಸಾರ್ವತ್ರಿಕವಾಗಿದೆ. ರಾಜ್ಯದಲ್ಲಿ ಮಾದಕ ವಸ್ತುಗಳ ಸೇವನೆ, ಮಾರಾಟ ತಡೆಗಟ್ಟಲು ರಾಜ್ಯ ಸರ್ಕಾರವು ನಾನಾ ಕ್ರಮ ತೆಗೆದುಕೊಂಡಿದೆ ಎಂದಿದ್ದಾರೆ.ಇದನ್ನೂ ಓದಿ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಪರಮೇಶ್ವರ್
ರಾಜ್ಯದಲ್ಲಿ ಮಾದಕ ದ್ರವ್ಯಗಳ ಹಾವಳಿಯನ್ನು ಎದುರಿಸಲು ಹಾಗೂ ತಡೆಗಟ್ಟಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ನೇತೃತ್ವದಲ್ಲಿ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ಎ.ಎನ್.ಟಿ.ಎಫ್) ಪಡೆಯನ್ನು ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿರುವ ಕುರಿತು ಡ್ರಗ್ಸ್ ಹಾವಳಿಯನ್ನು ಪೂರ್ಣವಾಗಿ ತಡೆಗಟ್ಟಲು ಗಾಂಜಾ ಬೆಳೆಯನ್ನು ಬೆಳೆಯುವುದು, ಮಾರಾಟ ಮಾಡುವುದು ಕಾನೂನಾತ್ಮಕ ಅಪರಾಧವಾಗಿರುತ್ತದೆ. ಗಾಂಜಾ ಸೇವನೆಯಿಂದ ಆಗುವ ದುಷ್ಪರಿಣಾಮಗಳು ಮತ್ತು ಅದರಿಂದಾಗುವ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ ಎಂದು ಹೇಳಿದ್ದಾರೆ.
ಮಾದಕ ದ್ರವ್ಯಗಳ ಅಕ್ರಮ ಸಾಗಾಟ ಮತ್ತು ಜಾಲದ ಕುರಿತು ಸ್ಥಳೀಯ ಬಾತ್ಮೀದಾರರು, ಅಪರಾಧ ವಿಭಾಗದ ಸಿಬ್ಬಂದಿ ಹಾಗೂ ಬೀಟ್ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ. ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯಗಳ ಅಕ್ರಮ ಸಾಗಾಟದ ಬಗ್ಗೆ ವಿಶೇಷವಾಗಿ ಮಾಹಿತಿಯನ್ನು ಸಂಗ್ರಹಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರತಿ ತಿಂಗಳು ಶಾಲಾ-ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ, ಮಾದಕ ವಸ್ತುಗಳ ಸೇವನೆಯಿಂದ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ.
ಸಂಶಯಾಸ್ಪದ ಹೈಸೆಕ್ಯುರಿಟಿ ಸ್ಥಳಗಳಲ್ಲಿ ಬಿಗಿ ನಿಗಾವಣೆ ಇಡಲಾಗಿದೆ. ಪಾರ್ಸಲ್ ಸರ್ವೀಸ್, ಕೋರಿಯರ್ ಸೆಂಟರ್, ರೆಸಾರ್ಟ್/ಫಾರ್ಮ್ ಹೌಸ್ಗಳಿಗೆ ದಿಢೀರ್ ಭೇಟಿ ಕೈಗೊಂಡು ನಗರದ ಹೊರವಲಯಗಳಲ್ಲಿ ಡ್ರಗ್ಸ್ ಪಾರ್ಟಿಗಳನ್ನು ತಡೆಗಟ್ಟುವ ಬಗ್ಗೆ ವಿಶೇಷ ಪೆಟ್ರೋಲಿಂಗ್ ನಡೆಸಲಾಗಿರುತ್ತದೆ. ಪ್ರತಿ ಮಾಹೆಯಲ್ಲಿ ಜಿಲ್ಲಾಮಟ್ಟದ ಎನ್ಸಿಒಆರ್ಡಿ ಸಭೆಗಳನ್ನು ನಡೆಸಲು ಎಲ್ಲಾ ಘಟಕಾಧಿಕಾರಿಗಳಿಗೆ ತಿಳಿಸಲಾಗಿರುತ್ತದೆ. ಪ್ರತಿ ವರ್ಷ ಜೂನ್ 26ರಂದು ಮಾದಕ ವಸ್ತುಗಳ ನಿಗ್ರಹ ದಿನವನ್ನು ಆಚರಣೆ ಮಾಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಮಾದಕ ವಸ್ತು ಮಾರಾಟ, ಉತ್ಪಾದನೆ ಬಗ್ಗೆ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ವಿ.ಸಿ ಮೂಲಕವು ಸಹ ಎಲ್ಲ ಘಟಕಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಸರ್ಕಾರಿ ಇಲಾಖೆಯಲ್ಲಿ ಖಾಲಿಯಿರುವ 2.88 ಲಕ್ಷ ಹುದ್ದೆ ಭರ್ತಿಗೆ ಕ್ರಮ – ಸಿದ್ದರಾಮಯ್ಯ

