ಬೆಂಗಳೂರು: ರಾಜ್ಯದೆಲ್ಲೆಡೆ ಸುರಿಯುತ್ತಿರುವ ಭಾರೀ ಮಳೆಗೆ ಅವಾಂತರಗಳು ಸೃಷ್ಟಿಯಾಗಿವೆ. ಈ ಬಗ್ಗೆ 16 ಜಿಲ್ಲೆಗಳಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಸ್ಥಿತಿಯನ್ನು ಸರಿಪಡಿಸಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಬೊಮ್ಮಾಯಿ, ಬೆಂಗಳೂರು-ಮೈಸೂರು ಹೆದ್ದಾರಿ ರಸ್ತೆ ಅವಾಂತರದ ಬಗ್ಗೆ ಮಾಹಿತಿ ಪಡೆದಿದ್ದೇನೆ. ಅಲ್ಲಲ್ಲಿ ನೀರು ನಿಂತಿರುವುದರಿಂದ, ವಾಹನಗಳಿಗೆ ಹೋಗಲು ಅನುಕೂಲವಾಗುವಂತೆ ಪರ್ಯಾಯ ಮಾರ್ಗಕ್ಕೆ ಎಸ್ಪಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಬಿಎಸ್ವೈ ನಿವಾಸಕ್ಕೆ ದೌಡಾಯಿಸಿದ ಸಿಎಂ ಬೊಮ್ಮಾಯಿ
ಆಯಾಯ ಡಿಸಿಗಳ ಜೊತೆ ಚರ್ಚೆ ಮಾಡಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತ ನೀರನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ. ಮೈಸೂರು ಡಿಸಿ ಹಾಗೂ ಉತ್ತರ ಕರ್ನಾಟಕ ಭಾಗಗಳಲ್ಲೂ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಮಳೆಯಿಂದ ಕೆರೆ ಕಟ್ಟೆಗಳಿಂದಾಗುವ ಅಪಾಯಗಳನ್ನು ತಪ್ಪಿಸಲು ಅವುಗಳ ಮೇಲೆ ನಿಗಾ ವಹಿಸಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಇದರೊಂದಿಗೆ ಮಳೆಯಿಂದಾಗಿ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಲು ಸೂಚನೆ ನೀಡಿರುವುದಾಗಿ ಮಾಹಿತಿ ನೀಡಿದರು. ಇದನ್ನೂ ಓದಿ: ಮಠದಲ್ಲಿಲ್ಲ ಮುರುಘಾ ಶ್ರೀಗಳು- ಮೌನಕ್ಕೆ ಜಾರಿದ ಭಕ್ತರು