ಬೀದರ್: ಭಾಲ್ಕಿ ತಾಲೂಕಿನ ಭಾತಾಂಬ್ರಾ ಗ್ರಾಮದ ನೀರಿನ ಟ್ಯಾಂಕ್ ನಿರ್ಮಾಣದಲ್ಲಿ ಮಾಡಿದ ಕಳಪೆ ಕಾಮಗಾರಿಯಿಂದಾಗಿ ಜನರು ಜೀವ ಕೈಯಲ್ಲಿ ಹಿಡಿದುಕೊಂಡು ನಡೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
20 ಲಕ್ಷ ರೂ.ಗೂ ಹೆಚ್ಚು ಅನುದಾನದಲ್ಲಿ ಗ್ರಾಮದ ಜನರಿಗೆ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡಿದ್ದು, ಅದು ಇಂದು ಅಥವಾ ನಾಳೆ ಬೀಳುವ ಹಂತದಲ್ಲಿದೆ. ಈ ಕುರಿತು ಮೂರು ವರ್ಷಗಳ ಹಿಂದೆ ಪಬ್ಲಿಕ್ ಟಿವಿ ಸುದ್ದಿ ಮಾಡಿದ್ದರೂ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮಾತ್ರ ಇದಕ್ಕೂ ತಮಗೂ ತಮಗೂ ಯಾವುದೇ ಸಂಬಂಧ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ.
ಸರ್ಕಾರ ಗ್ರಾಮೀಣ ನೀರು ಸರಬರಾಜು ಯೋಜನೆಯ ಅಡಿಯಲ್ಲಿ 20 ಲಕ್ಷ ರೂ. ಖರ್ಚು ಮಾಡಿ ನೀರಿನ ಟ್ಯಾಂಕ್ ನಿರ್ಮಾಣ ಮಾಡಿತ್ತು. ಈ ಟ್ಯಾಂಕ್ ನಿರ್ಮಾಣವಾಗಿ 20 ವರ್ಷಗಳು ಕಳೆದಿದ್ದು ಈಗಾಗಲೇ ಸಂಪೂರ್ಣವಾಗಿ ಬೀಳುವ ಹಂತಕ್ಕೆ ತಲುಪಿದೆ. ಪ್ರತಿ ದಿನ ನೂರಾರು ವಿದ್ಯಾರ್ಥಿಗಳು ಈ ಟ್ಯಾಂಕ್ ಪಕ್ಕದಿಂದ ಶಾಲೆಗೆ ಹೋಗಬೇಕಾದ ಅನಿರ್ವಾತೆ ಇದ್ದು, ಸ್ಥಳೀಯರು ಸೇರಿದಂತೆ ಮಕ್ಕಳೂ ಸಹ ಭಯದ ವಾತವರಣದಲ್ಲಿ ತಿರುಗಾಡಬೇಕಾದ ಪರಿಸ್ಥಿತಿ ಎದುರಾಗಿದೆ.
ಈ ಕುರಿತಂತೆ ಪಬ್ಲಿಕ್ ಟಿವಿ ಸಾರ್ವಜನಿಕರ ಹಿತದೃಷ್ಟಿಯಿಂದ ಮೂರು ವರ್ಷಗಳ ಹಿಂದೆಯೇ ಈ ಕುರಿತು ಸುದ್ದಿ ಪ್ರಸಾರ ಮಾಡಿತ್ತು. ಆದರೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಶಾಸಕರು ಹಾಗೂ ಅಧಿಕಾರಿಗಳ ವಿರುದ್ದ ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ.
ಈಗಾಗಲೇ ಹಲವು ಜಿಲ್ಲೆಗಳಲ್ಲಿ ನೀರಿನ ಟ್ಯಾಂಕ್ಗಳು ಕುಸಿದು ಹಲವು ಜೀವಗಳನ್ನು ಬಲಿ ತೆಗೆದುಕೊಂಡಿರುವ ಘಟನೆಗಳು ನಮ್ಮ ಮುಂದಿವೆ. ಆದರೆ ನಮ್ಮ ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆಯುವ ಮೊದಲೇ ಅಧಿಕಾರಿಗಳು ಎಚ್ಚರಗೊಳ್ಳಬೇಕಿದೆ. ಸರ್ಕಾರ ಈ ಕಳಪೆ ಕಾಮಗಾರಿಯ ಬಗ್ಗೆ ಸರಿಯಾದ ತನಿಖೆ ನಡೆಸಿ, ಭ್ರಷ್ಟ ಅಧಿಕಾರಿಗಳ ವಿರುದ್ಧ ಸೂಕ್ತವಾದ ಕ್ರಮ ತೆಗೆದುಕೊಳ್ಳಬೇಕು ಅಂತಾ ಗ್ರಾಮಸ್ಥರು ಆಗ್ರಹಿಸಿದ್ದಾರೆ.