ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳ ಎಡವಟ್ಟಿನಿಂದ ಕಾಲುವೆಗೆ ಹರಿಯಬೇಕಿದ್ದ ನೀರು ಸಾರ್ವಜನಿಕರ ಮನೆಗಳಿಗೆ ನುಗ್ಗಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಆಲಮೇಲ ಪಟ್ಟಣದಲ್ಲಿ ನಡೆದಿದೆ.
ಆಲಮೇಲ ಪಟ್ಟಣದ ಬಸವ ನಗರದಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವಂತಾಗಿದೆ. ಕೆಲ ದಿನಗಳ ಹಿಂದೆ ಕೃಷ್ಣಾ ಎಡದಂಡೆ ಕಾಲುವೆಯಿಂದ ಆಲಮಟ್ಟಿ ಅಣೆಕಟ್ಟಿಗೆ ನೀರು ಹರಿಸಲಾಗಿತ್ತು. ಆದರೆ ಕಾಲುವೆಯಲ್ಲಿ ಹೂಳು ತುಂಬಿದ ಪರಿಣಾಮ ಕಾಲುವೆಗೆ ಹೋಗಬೇಕಿದ್ದ ನೀರು ಮನೆಗಳಿಗೆ ನುಗ್ಗಿದೆ.
16ನೇ ಡಿಸ್ಟ್ರಿಬ್ಯುಟರ್ ಕಾಲುವೆ ಮೂಲಕ ನೀರು ಹರಿಯುತ್ತಿದೆ. ಕಾಲುವೆ ದುರಸ್ತಿಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಕಾಲುವೆಗಳಿಗೆ ಹರಿಯಬೇಕಿದ್ದ ಅಪಾರ ಪ್ರಮಾಣದ ನೀರು ಪೋಲಾಗಿರುವುದು ಕೂಡ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಧಿಕಾರಿಗಳು ಕಾಲುವೆ ಬಗ್ಗೆ ತೋರಿದ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ. ಸರಿಯಾದ ಸಮಯಕ್ಕೆ ಹೂಳೆತ್ತುವ ಕಾರ್ಯ ಮಾಡಿದ್ದರೆ ಈ ಪರಿಸ್ಥಿತಿ ಎದುರಾಗುತ್ತಿರಲಿಲ್ಲ ಎಂದು ಜನರು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.