ಬೆಂಗಳೂರು: ನಗರದ ವಿಭೂತಿಪುರದಲ್ಲಿ ಬಾಲಕನಿಗೆ ನಾಯಿಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಶವಾಗಾರದ ಮುಂದೆ ಬಾಲಕನ ಪೋಷಕರು ಕಣ್ಣೀರು ಹಾಕುತ್ತಿರುವ ದೃಶ್ಯ ಮನಕಲಕುವಂತಿದೆ.
10 ವರ್ಷ ಸಾಕಿದ ಮಗನನ್ನು ಇದೀಗ ನಾವು ನಾಯಿಗೆ ಬಲಿಕೊಟ್ಟಿದ್ದೇವೆ. ನಮ್ಮ ಮಗುವಿಗೆ ಬಂದ ಸ್ಥಿತಿ ಬೇರೆ ಯಾವ ಮಕ್ಕಳಿಗೂ ಕೂಡ ಬರಬಾರದು. ಅಧಿಕಾರಿಗಳು ಅವರ ಕೆಲಸ ಮಾಡ್ತಿದ್ದಾರೆ. ಆದ್ರೆ ಮಧ್ಯದವರು ಅದನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ ಅಂತ ಬಾಲಕನ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಆಸ್ಪತ್ರೆಯಲ್ಲಿ ಅವರ ಆಕ್ರಂದನ ಮುಗಿಲು ಮುಟ್ಟಿತ್ತು.
ಬೌರಿಂಗ್ ಆಸ್ಪತ್ರೆಯಲ್ಲಿ ಮೃತ ಬಾಲಕನ ಶವ ಪರೀಕ್ಷೆ ನಡೆದಿದ್ದು, ಮಗುವಿನ ಸಾವಿಗೆ ಸಾರ್ವಜನಿಕರ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆರೋಪಿಸುತ್ತಿದ್ದಾರೆ.
ನಡೆದಿದ್ದೇನು?:
ಮುರಗಮ್ಮ ಹಾಗೂ ಮನೋಜ್ ದಂಪತಿಯ ಮಗಪ್ರವೀಣ್ ಬುಧವಾರ ತನ್ನ ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿದ್ದನು. ಈ ವೇಳೆ ಬಾಲಕನ ಮೇಲೆ ಸುಮಾರು 10 ಕ್ಕೂ ಹೆಚ್ಚು ನಾಯಿಗಳು ದಾಳಿ ಮಾಡಿದ್ದು, ಪ್ರವೀಣ್ ನ ಕತ್ತು, ಮೈ ಹಾಗೂ ಕೈ ಭಾಗಕ್ಕೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿವೆ. ಇದನ್ನು ಕಂಡ ಸ್ಥಳೀಯರು ನಾಯಿಗಳನ್ನು ಓಡಿಸಿ, ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಾಲಕನ ಸ್ಥಿತಿಯು ಚಿಂತಾಜನಕವಾಗಿತ್ತು. ಆಗ ವೈದ್ಯರು ಇನ್ನು ಮೂರು ದಿನಗಳ ಕಾಲ ಏನು ಹೇಳುವುದಕ್ಕೆ ಆಗುವುದಿಲ್ಲ ಎಂದಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಬಾಲಕ ಮೃತಪಟ್ಟಿದ್ದಾನೆ.
ಬಾಲಕನ ಪೋಷಕರು ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ಚಿಕಿತ್ಸೆಗೆ ಹಣವಿಲ್ಲದಿದ್ದಾಗ ಸಹಾಯಕ್ಕಾಗಿ ಮನವಿ ಮಾಡಿಕೊಂಡಿದ್ದರು. ಆಗ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಪ್ರವೀಣ್ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಮೇಯರ್ ಸಂಪತ್ ರಾಜ್ ಅವರು ತಿಳಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv