– ಬಿಜೆಪಿ ಸರ್ಕಾರ ಕಾನೂನಾತ್ಮಕವಾಗಿ ಒಳಮೀಸಲಾತಿ ಕೊಟ್ಟಿಲ್ಲ
– ಗೃಹ ಸಚಿವ ಪರಮೇಶ್ವರ್ ಟೀಕೆ
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿಗೆ ನೀಡಲಾಗಿದ್ದ ಒಳಮೀಸಲಾತಿಯ (SC Internal Reservation) ಬಗ್ಗೆ ಪುನರ್ ಪರಿಶೀಲನೆ ಮಾಡ್ತೇವೆ ಎಂದು ಗೃಹಸಚಿವ ಜಿ.ಪರಮೇಶ್ವರ್ (G. Parameshwara) ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಪರಿಶಿಷ್ಟ ಜಾತಿಗೆ ನೀಡಿದ್ದ ಒಳಮೀಸಲಾತಿಯ ಬಗ್ಗೆ ಪುನರ್ ಪರಿಶೀಲನೆ ಮಾಡ್ತೇವೆ. ಏಕೆಂದರೆ ಬಿಜೆಪಿ ಸರ್ಕಾರ (BJP Government) ಕಾನೂನಾತ್ಮಕವಾಗಿ ಒಳಮೀಸಲಾತಿ ಕೊಟ್ಟಿಲ್ಲ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: Ayodhya Ram Mandir: ಗರ್ಭಗುಡಿ ಪ್ರವೇಶಿಸಿದ ರಾಮಲಲ್ಲಾ ವಿಗ್ರಹ – ಇಂದು ಮೂರ್ತಿ ಪ್ರತಿಷ್ಠಾಪನೆ
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬಗ್ಗೆ ಒಂದು ಅಂತಿಮ ನಿರ್ಣಯ ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ. ನಮ್ಮ ಹಿಂದಿನ ಸರ್ಕಾರದಲ್ಲಿ ಚಿತ್ರದುರ್ಗ ಸಮಾವೇಶದಲ್ಲಿ ಸದಾಶಿವ ಆಯೋಗದ ನಿರ್ಣಯ ಕೈಗೊಳ್ಳಲು ತೀರ್ಮಾನ ಮಾಡಿದ್ದೆವು. ಆದ್ರೆ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗ ಸದಾಶಿವ ಆಯೋಗದ ವರದಿಯನ್ನೇ ತಿರಸ್ಕಾರ ಮಾಡಿದರು. ಒಳಮೀಸಲಾತಿ ಕೊಡುವಾಗ ಕಾನೂನಾತ್ಮಕವಾಗಿ ಕೊಡಬೇಕಾಗುತ್ತದೆ. ನಾವೇ ಸಂವಿಧಾನಕ್ಕೆ ತಿದ್ದುಪಡಿ ತರಲು ಆಗಲ್ಲ. ಹಾಗಾಗಿ ಕೇಂದ್ರಕ್ಕೆ ಸಂವಿಧಾನ ತಿದ್ದುಪಡಿ ಮಾಡಲು ಶಿಫಾರಸು ಕಳಿಸುವ ಬಗ್ಗೆ ಇವತ್ತಿನ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ದಿನವೇ ಮಂಡ್ಯದಲ್ಲೂ ರಾಮಮಂದಿರ ಲೋಕಾರ್ಪಣೆ
ಇದೇ ವೇಳೆ ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರಕ್ಕೆ ಪ್ರತಿಕ್ರಿಯಿಸಿ, ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಪಟ್ಟಿ ಸದ್ಯದಲ್ಲೇ ಪ್ರಕಟವಾಗಲಿದೆ. ಈಗಾಗಲೇ ಮಾಧ್ಯಮಗಳಲ್ಲೂ ಈ ವರದಿ ಪ್ರಸಾರವಾಗಿದೆ. ಮಾಧ್ಯಮಗಳಲ್ಲಿ ಬಂದ ಮೇಲೆ ಪ್ರಕಟಿಸಲೇಬೇಕಲ್ಲ ಎಂದು ತಿಳಿಸಿದ್ದಾರೆ.
ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬರುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ್ ಅವರು, ಅನಂತಕುಮಾರ್ ಹೆಗಡೆ ವಿಚಾರದಲ್ಲಿ ಸಂಯಮದಿಂದ ವರ್ತಿಸಬೇಕಾಗುತ್ತದೆ. ಏಕೆಂದರೆ ಅವರೂ ಮಾಜಿ ಕೇಂದ್ರ ಸಚಿವರು, ಹಾಲಿ ಸಂಸದರು ಅರ್ಥಮಾಡಿಕೊಂಡು ಮಾತನಾಡಬೇಕು. ಇದು ಪೊಲೀಸರ ದೌರ್ಬಲ್ಯ ಅಲ್ಲ. ಪೊಲೀಸರೂ ಅವರಿಗೆ ಸಮಯ ಕೊಟ್ಟಿದ್ದಾರೆ. ಅಂತಹ ಮಾತುಗಳನ್ನು ಮುಂದುವರಿಸಿದ್ರೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಇನ್ನೂ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಸಚಿವರು, ಮಲ್ಲಿಕಾರ್ಜುನ ಖರ್ಗೆ ಅವರು ಸ್ಪರ್ಧೆ ಮಾಡುವ ವಿಚಾರ ಗೊತ್ತಿಲ್ಲ. ಈ ಬಗ್ಗೆ ಅವರೂ ನಮ್ಮೊಂದಿಗೆ ಚರ್ಚಿಸಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾರ್ತಿಕ್ಗೆ ಹುಡುಗಿ ಇದ್ದಾಳೆ, ಗೊತ್ತಿದ್ರು ಬೀಳಲು ನಾನು ಬಕ್ರನಾ- ಸ್ನೇಹಿತ್ಗೆ ನಮ್ರತಾ ಪ್ರಶ್ನೆ