ಬೆಂಗಳೂರು: ಬಿಜೆಪಿ ತನ್ನ ಐದು ಪಟ್ಟಿಯನ್ನು ಬಿಡುಗಡೆ ಮಾಡಿದರೂ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಯಾರು ಎನ್ನುವುದನ್ನು ತಿಳಿಸದೇ ಸಸ್ಪೆನ್ಸ್ ಮೂಡಿಸಿದೆ.
ಹೌದು. ಕೇಂದ್ರ ಸಚಿವ ಅನಂತ್ ಕುಮಾರ್ ನಿಧನದ ಬಳಿಕ ಈ ಕ್ಷೇತ್ರವನ್ನು ಅವರ ಪತ್ನಿ ತೇಜಸ್ವಿನಿ ಅವರಿಗೆ ನೀಡಲು ಪಕ್ಷದ ಮುಖಂಡರು ಮುಂದಾಗಿದ್ದರು. ಈ ಸಂಬಂಧ ದಕ್ಷಿಣ ಭಾಗದ ಬಿಜೆಪಿ ಶಾಸಕರು, ಮುಖಂಡರ ಸಭೆ ನಡೆಸಿದ ಬಳಿಕ ರಾಜ್ಯ ನಾಯಕರು ಹೈಕಮಾಂಡಿಗೆ ತೇಜಸ್ವಿನಿ ಅವರ ಹೆಸರನ್ನು ಶಿಫಾರಸು ಮಾಡಿದ್ದರು.
ಅನಂತ್ ಕುಮಾರ್ ಅವರ ಸತತ ಜಯದಿಂದ ಬಿಜೆಪಿಯ ಭದ್ರಕೋಟೆ ಆಗಿರುವ ಈ ಕ್ಷೇತ್ರದಲ್ಲಿ ಸುಲಭವಾಗಿಯೇ ಅಭ್ಯರ್ಥಿ ಆಯ್ಕೆಯನ್ನು ಬಿಜೆಪಿ ಮಾಡುತ್ತದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಬಿಜೆಪಿ ತನ್ನ ಐದು ಪಟ್ಟಿಯನ್ನು ಬಿಡುಗಡೆ ಮಾಡಿದರೂ ಬೆಂಗಳೂರು ದಕ್ಷಿಣದ ಅಭ್ಯರ್ಥಿಯನ್ನು ಘೋಷಿಸದೇ ಕುತೂಹಲ ಮೂಡಿಸಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಪ್ರಧಾನಿ ಮೋದಿ ಸ್ಪರ್ಧಿಸುತ್ತಾರೆ ಎನ್ನುವ ಗಾಳಿ ಸುದ್ದಿ ಹಬ್ಬಿತ್ತು. ಈ ಸುದ್ದಿಗೆ ರಾಜ್ಯ ನಾಯಕರು ಪ್ರಧಾನಿ ಮೋದಿ ಈ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ನಿಲೇಕಣಿ ವಿರುದ್ಧ 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದಿದ್ದ ಅನಂತ್ ಕುಮಾರ್- ಕೊನೆಯ ಹೈ ವೋಲ್ಟೇಜ್ ಚುನಾವಣಾ ಕಣ ಹೀಗಿತ್ತು
ಯಾರು ಅಭ್ಯರ್ಥಿ?
ತೇಜಸ್ವಿನಿ ಅನಂತಕುಮಾರ್ ಜತೆಗೆ ಇಬ್ಬರು ಹೆಸರನ್ನು ರಾಜ್ಯ ಬಿಜೆಪಿಯ ನಾಯಕರು ತೇಲಿಬಿಟ್ಟಿದ್ದಾರೆ. ಹಾಲಿ ಬಿಜೆಪಿ ಯುವಮೋರ್ಚಾದಲ್ಲಿ ತೊಡಗಿಸಿಕೊಂಡಿರುವ ವ್ಯಕ್ತಿ ಮತ್ತು ಉದ್ಯಮಿಯೊಬ್ಬರ ಪತ್ನಿಯೊಬ್ಬರ ಹೆಸರು ಮುನ್ನೆಲೆಗೆ ಬಂದಿದೆ. ಹೈಕಮಾಂಡ್ ಬಳಿ ಮೂರು ಹೆಸರುಗಳಿದ್ದು ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ.
ಅನಂತ್ ಕುಮರ್ ಅವರು 6 ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸಿ ಜಯಗಳಿಸಿದ್ದರು. 2014ರ ಚುನಾವಣೆಯಲ್ಲಿ ಅನಂತ್ ಕುಮಾರ್ 2.28 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಅನಂತ್ ಕುಮಾರ್ 6,33,816 ಮತಗಳನ್ನು ಪಡೆದಿದ್ದರೆ, ನಿಲೇಕಣಿ 4,05,241 ಮತಗಳನ್ನು ಪಡೆದಿದ್ದರು.
ಬೆಂಗಳೂರು ದಕ್ಷಿಣದಿಂದ ತೇಜಸ್ವಿನಿ ಅನಂತ್ ಕುಮಾರ್ ಸ್ಪರ್ಧೆ ನಿಶ್ಚಿತ ಎನ್ನಲಾಗಿತ್ತು. ಹೀಗಾಗಿ ಕಾಂಗ್ರೆಸ್ ನಿಂದ ಗೋವಿಂದರಾಜ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಲು ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿತ್ತು. ಆದರೆ ಅಭ್ಯರ್ಥಿ ಘೋಷಣೆ ಮಾಡದೇ ಬಿಜೆಪಿ ತೀವ್ರ ಕುತೂಹಲ ಮೂಡಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಪ್ರಕಟಿಸಿಲ್ಲ.