ಮಡಿಕೇರಿ: ಬೈಕ್ನಲ್ಲಿ ತೆರಳುತ್ತಿದ್ದ ಸಹೋದರರಿಬ್ಬರ ಮೇಲೆ ಕಾಡಾನೆ ದಾಳಿ (Elephant Attack) ಮಾಡಿದ ಪ್ರಕರಣ ದಕ್ಷಿಣ ಕೊಡಗಿನ ಪೊನ್ನಂಪೇಟೆ ಬಳಿಯ ಹಳ್ಳಿಗಟ್ಟು ಗ್ರಾಮದಲ್ಲಿ ನಡೆದಿದೆ.
ಮೊಹಮ್ಮದ್ ಫೈಜನ್ ಹಾಗೂ ಅಬುರ್ ಉವೈಸ್ ಸಹೋದರರು ಕಾಡಾನೆ ದಾಳಿಯಿಂದ ಗಾಯಗೊಂಡಿದ್ದು, ಕೊಡಗು ಜಿಲ್ಲಾ ಆಸ್ಪತ್ರೆಯಲ್ಲಿ (Kodagu Hospital) ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ (ಜ.3) ಬೆಳಗ್ಗಿನ ಜಾವ ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಕಾಡಾನೆ ದಾಳಿ ಮಾಡಿದೆ. ಈ ಸಂದರ್ಭ ಸಹೋದರರು ಬಿದ್ದು ಗಂಭೀರ ಸ್ವರೂಪದ ಗಾಯಗಳಾಗಿದೆ. ಇಬ್ಬರಿಗೂ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಇದನ್ನೂ ಓದಿ: ದೂರು ಕೊಡಲು ಬಂದ ಮಹಿಳೆಯೊಂದಿಗೆ ಅಸಭ್ಯ ವರ್ತನೆ – ಮಧುಗಿರಿ ಡಿವೈಎಸ್ಪಿ ಬಂಧನ
ಬಗೆಹರಿಯದ ಸಮಸ್ಯೆ:
ಕಳೆದ 2 ದಶಕಗಳಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ನಿರಂತರವಾಗಿ ಹೆಚ್ಚುತ್ತಿದೆ. ಅದರಲ್ಲೂ ನಾಗರಹೊಳೆ ಅರಣ್ಯದ ಅಂಚಿನ ದಕ್ಷಿಣ ಕೊಡಗಿನ ಗ್ರಾಮಗಳು ಕಾಡಾನೆ ಹಾವಳಿಯಿಂದ ನಲುಗಿಹೋಗಿವೆ. ಇಲ್ಲಿನ ಗ್ರಾಮೀಣರು ಕಾಡಾನೆ ಹಾವಳಿಯಿಂದ ಒಂದೆಡೆ ಜೀವ, ಮತ್ತೊಂದೆಡೆ ಕೃಷಿ ಫಸಲನ್ನು ಕಳೆದುಕೊಳ್ಳುತ್ತಿದ್ದಾರೆ. ನೂರಾರು ಕಾಡಾನೆಗಳು ದಕ್ಷಿಣ ಕೊಡಗಿನ ಕಾಫಿ ತೋಟಗಳನ್ನೇ ತಮ್ಮ ನೆಲೆಯನ್ನಾಗಿಸಿಕೊಂಡಿವೆ. ಇವುಗಳನ್ನು ಅರಣ್ಯಕ್ಕೆ ಅಟ್ಟುವ ಸಾಕಷ್ಟು ಪ್ರಯತ್ನಗಳನ್ನು ಅರಣ್ಯ ಇಲಾಖೆ ನಡೆಸಿದೆ. ಆದರೂ ಕಾಡಾನೆಗಳು ಮರಳಿ ತೋಟಕ್ಕೆ ದಾಂಗುಡಿ ಇಡುತ್ತಿವೆ.
ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಭೇಟಿ:
ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಕಾಡಾನೆ ದಾಳಿಯಿಂದ ಗಾಯಗೊಂಡ ಸಂತ್ರಸ್ತರ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ, ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಇದನ್ನೂ ಓದಿ: Kodagu | ವಿರಾಜಪೇಟೆ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ – ಜನರಲ್ಲಿ ಢವ ಢವ!
ಅಲ್ಲದೇ ಜೀವ ಮತ್ತು ಬೆಳೆಹಾನಿಗೆ ಕಾರಣವಾಗುತ್ತಿರುವ ಕಾಡಾನೆಗಳನ್ನು ಸ್ಥಳಾಂತರಿಸುವ ಪ್ರಯತ್ನ ಸರ್ಕಾರದ ಮೂಲಕ ನಡೆಯುತ್ತಿದೆ. ಕೊಡಗು, ಚಿಕ್ಕಮಗಳೂರು, ಹಾಸನ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಗುರುತಿಸಿ ಅವುಗಳಿಗೆ ಪುನರ್ವಸತಿ ಒದಗಿಸಬೇಕಾಗಿದೆ. ಇದಕ್ಕೆ ಅಗತ್ಯ ಜಾಗ ಗುರುತಿಸುವ ನಿಟ್ಟಿನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಈಗಾಗಲೇ ಅರಣ್ಯ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು 2-3 ವರ್ಷಗಳಷ್ಟು ಕಾಲಾವಕಾಶ ಬೇಕಾಗುತ್ತದೆ ಎಂದು ಸಂಕೇತ್ ಹೇಳಿದ್ದಾರೆ. ಇದನ್ನೂ ಓದಿ: ಕಲಬುರಗಿ | ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನ ನೀಡುವಂತೆ ಬೈರತಿ ಸುರೇಶ್ಗೆ ಮನವಿ