ಉಡುಪಿ\ಚಿಕ್ಕಮಗಳೂರು: ದಿನದಿಂದ ದಿನಕ್ಕೆ ಲೋಕಸಭಾ ಚುನಾವಣೆ ಕಣ ರಂಗೇರುತ್ತಿದೆ. ಮೋದಿ 3.0ಗೆ ಬಿಜೆಪಿ ತುದಿಗಾಲಲ್ಲಿದ್ರೆ ಕಾಂಗ್ರೆಸ್ ಕೂಡ ಸರ್ಕಾರ ರಚನೆಗೆ ಕಸರತ್ತು ನಡೆಸ್ತಿದೆ. ಈ ಮಧ್ಯೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಗೋಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಶೋಭಕ್ಕ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಆದರೆ ಆಕಾಂಕ್ಷಿಗಳಿದ್ದರೂ ಕಾಂಗ್ರೆಸ್ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆಗೆ ಮಣೆ ಹಾಕೋದು ನಿಚ್ಚಳವಾಗಿದೆ.
2012ರ ಉಪಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಗೆದ್ದಿದ್ದ ಜಯಪ್ರಕಾಶ್ ಹೆಗ್ಡೆ ಬಿಜೆಪಿ ಸೇರಿ, ಪ್ರಸ್ತುತ ಬಿಜೆಪಿಯಲ್ಲಿದ್ದಾರೆ. ಬಿಜೆಪಿ ಸರ್ಕಾರ ಅವರನ್ನ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿಸಿತ್ತು. ಬದಲಾದ ಸರ್ಕಾರದಲ್ಲಿ ಸಿಎಂ ಸಿದ್ದು ಆಪ್ತರೂ ಆಗಿದ್ದ ಹೆಗ್ಡೆಯನ್ನ ಸಿದ್ದರಾಮಯ್ಯ ಅಧ್ಯಕ್ಷರಾಗಿ ಮುಂದುವರಿಸಿದ್ರು. ಇದೀಗ ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಶೋಭಾ ಕರಂದ್ಲಾಜೆಯನ್ನ ಎದುರಿಸಲು ಜಯಪ್ರಕಾಶ್ ಹೆಗ್ಡೆಯೇ ಸೂಕ್ತ ಅಭ್ಯರ್ಥಿ ಎಂದು ಕಾಂಗ್ರೆಸ್ ಹೆಗ್ಡೆಗೆ ಗಾಳ ಹಾಕಿದೆ.
ಸರ್ಕಾರಕ್ಕೆ ಜಾತಿ ಜನ ಗಣತಿ ವರದಿ (Caste Cencus Report) ಸಲ್ಲಿಸಿರುವ ಜಯಪ್ರಕಾಶ್ ಹೆಗ್ಡೆ (Jayaprakash Hegde) ಸದ್ಯದಲ್ಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿಯಾಗಲಿದ್ದಾರೆ ಎಂದು ಕಾಂಗ್ರೆಸ್ ವಲಯವೇ ಗುಸು-ಗುಸು ಅಂತಿದೆ. ಹೆಗ್ಡೆ ಮಾರ್ಚ್ 3ರಂದು ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಗ್ಯಾರಂಟಿ ಸಮಾವೇಶದಲ್ಲಿ ಸಿದ್ದರಾಮಯ್ಯ-ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಇದನ್ನೂ ಓದಿ: ಬಿಜೆಪಿಗೆ ಶಾಕ್- ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಪುತ್ತಿಲ ಕಣಕ್ಕೆ
ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿ ಬಿಜೆಪಿ ಸೇರಿದ್ದ ಜೆಪಿಗೆ, ಬಿಜೆಪಿ ಟಿಕೆಟ್ ನೀಡಿಲ್ಲ. ಎರಡನೇ ಬಾರಿ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಿತ್ತು. ಇದೀಗ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡದಿದ್ದರೆ ಮತ್ತೆ ಕಾಂಗ್ರೆಸ್ಸಿಗೆ ಸೇರುವ ಎಲ್ಲಾ ಸಾಧ್ಯತೆಗಳು ಕಂಡುಬರುತ್ತಿದೆ. ಬೇಗ ನಿರ್ಧಾರ ತೆಗೆದುಕೊಳ್ಳಿ ಎನ್ನುತ್ತಿದೆ ಉಡುಪಿ ಜಿಲ್ಲಾ ಕಾಂಗ್ರೆಸ್.
ಒಟ್ಟಿನಲ್ಲಿ ಉಡುಪಿ-ಚಿಕ್ಕಮಗಳೂರು ಎರಡು ಜಿಲ್ಲೆಗಳು ಹಿಂದುತ್ವದ ಜಿಲ್ಲೆಗಳು. ವಿಧಾನಸಭಾ ಚುನಾವಣೆಯಲ್ಲಿ ಉಡುಪಿಯಲ್ಲಿ ಐದಕ್ಕೆ ಐದು ಬಿಜೆಪಿ ಗೆದ್ದಿದ್ರೆ, ಚಿಕ್ಕಮಗಳೂರಲ್ಲಿ ಐದಕ್ಕೆ ಐದು ಕಾಂಗ್ರೆಸ್ ಸೇರಿದೆ. ಬಿಜೆಪಿಯ ಶೋಭಾ ಕರಂದ್ಲಾಜೆಗೆ ಬಿಜೆಪಿಗರೇ ಮಾಡ್ತಿರೋ ಗೋ ಬ್ಯಾಕ್ ಶೋಭಕ್ಕ ಅಭಿಯಾನವನ್ನ ಕಾಂಗ್ರೆಸ್ಸಿಗೆ ಪ್ಲಸ್ ಮಾಡಿಕೊಳ್ಳೋ ಉತ್ಸುಕದಲ್ಲಿದ್ದಾರೆ.