ಹಾಸನ: ಮಹಿಳೆಯೊಬ್ಬರ ಮೇಲೆ ವಿದ್ಯುತ್ ಕಂಬ ಮುರಿದುಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಸಕಲೇಶಪುರದ (Sakleshpura) ಗಾಳಿಗುಡ್ಡ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶಾರದ (45) ಗಂಭೀರವಾಗಿ ಗಾಯಗೊಂಡ ಮಹಿಳೆ. ಅವರು ಮನೆಯಿಂದ ಹೊರಗೆ ಬಂದಿದ್ದ ವೇಳೆ ವಿದ್ಯುತ್ ಕಂಬ ಏಕಾಏಕಿ ಮುರಿದುಬಿದ್ದಿದೆ. ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ವಿದ್ಯುತ್ ಕಂಬ ಸಂಪೂರ್ಣವಾಗಿ ಶಿಥಿಲಗೊಂಡಿದ್ದು, ಬದಲಿಸುವಂತೆ ಗ್ರಾಮಸ್ಥರು ಹಲವು ಬಾರಿ ಚೆಸ್ಕಾಂಗೆ (CESCOM) ಮನವಿ ಮಾಡಿದ್ದರು. ಆದರೆ ವಿದ್ಯುತ್ ಕಂಬ ಬದಲಿಸದೇ ಚೆಸ್ಕಾಂ ಅಧಿಕಾರಿಗಳು ಹಾಗೂ ನೌಕರರು ನಿರ್ಲಕ್ಷ್ಯ ತೋರಿದ್ದು ಅಧಿಕಾರಿಗಳ ನಿರ್ಲಕ್ಷತನದಿಂದಲೇ ಅವಘಡ ನಡೆದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಗಾಯಗೊಂಡ ಮಹಿಳೆಗೆ ಜಿಲ್ಲಾಸ್ಪತ್ರೆಯ ಐಸಿಯುವಿಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.