ನವದೆಹಲಿ: ವಿಶ್ವಕಪ್ ನಲ್ಲಿ ಭಾರತ, ಪಾಕಿಸ್ತಾನದ ವಿರುದ್ಧ ಡಕ್ವರ್ಥ್ ಲೂಯಿಸ್ ನಿಯಮದನ್ವಯ 89 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಟೀಂ ಇಂಡಿಯಾಕ್ಕೆ ಗಾಯದ ಸಮಸ್ಯೆ ಕಾಡುತ್ತಿದೆ. ಆರಂಭಿಕ ಆಟಗಾರ ಶಿಖರ್ ಧವನ್ ನಂತರ ಭಾರತದ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಪಂದ್ಯದಿಂದ ಹೊರ ನಡೆದಿದ್ದಾರೆ.
ಭಾನುವಾರ ಇಂಗ್ಲೆಂಡ್ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ತನ್ನ ಎರಡನೇ ಓವರ್ನ ನಾಲ್ಕನೇ ಎಸೆತವನ್ನು ಎಸೆಯುವ ಸಮಯದಲ್ಲಿ ಗಾಯದ ಸಮಸ್ಯೆಗೆ ತುತ್ತಾದ ಭುವನೇಶ್ವರ್ ಕುಮಾರ್ ಆಟದ ಮಧ್ಯಯೇ ಮೈದಾನದಿಂದ ಹೊರ ಹೋಗಿದ್ದರು.
ಈ ವಿಚಾರವಾಗಿ ಮಾತನಾಡಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಭುವನೇಶ್ವರ್ ಕುಮಾರ್ ಕಾಲಿನ ಸ್ನಾಯು ಸೆಳೆತದಿಂದ ಬಳಲುತ್ತಿದ್ದಾರೆ. ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದು, ಮುಂದಿನ 2-3 ಪಂದ್ಯಗಳಿಗೆ ಭುವನೇಶ್ವರ್ ಕುಮಾರ್ ಅಲಭ್ಯರಾಗಲಿದ್ದಾರೆ ಎಂದು ಹೇಳಿದ್ದಾರೆ.
ಭುವನೇಶ್ವರ್ ಕುಮಾರ್ ಅವರು ನಮ್ಮ ತಂಡದಲ್ಲಿ ಉತ್ತಮ ಬೌಲರ್ ಅವರು ಗಾಯದ ಸಮಸ್ಯೆಗೆ ತುತ್ತಾಗಿದ್ದು ನಮಗೆ ಬೇಸರದ ಸಂಗತಿ. ಆದರೆ ನಮ್ಮ ಜೊತೆ ಅವರ ಜಾಗವನ್ನು ತುಂಬಲು ಅನುಭವಿ ವೇಗಿ ಮೊಹಮ್ಮದ್ ಶಮಿ ಅವರು ಇದ್ದಾರೆ. ಹಾಗಾಗಿ ನಾವು ತುಂಬಾ ಚಿಂತಿಸಬೇಕಿಲ್ಲಾ ಎಂದು ಅವರು ಹೇಳಿದ್ದಾರೆ.
ಈಗಾಗಲೇ ಶಿಖರ್ ಧವನ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಪಾಕಿಸ್ತಾನದ ವಿರುದ್ಧ ನಡೆದ ಪಂದ್ಯದಲ್ಲಿ ಮೈದಾನಕ್ಕಿಳಿಯಲಿಲ್ಲ. ಈಗ ಭುವನೇಶ್ವರ್ ಕುಮಾರ್ ಗಾಯಗೊಂಡಿದ್ದಾರೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.