ಯಶ್ ಬಾಲಿವುಡ್ ಗೆ ಹಾರಲು ಸರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ರಾವಣ ಪಾತ್ರಕ್ಕಾಗಿ ಅವರು ಸಾಕಷ್ಟು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರಂತೆ. ತಮ್ಮ ಹೊಸ ಸಿನಿಮಾದ ಜೊತೆ ಜೊತೆಗೆ ಈ ಸಿನಿಮಾದಲ್ಲೂ ಅವರು ಭಾಗಿಯಾಗಲಿದ್ದಾರೆ ಎನ್ನುತ್ತಿವೆ ಮೂಲಗಳು.
ರಾಮಾಯಣ (Ramayana) ಸಿನಿಮಾ ಆಗುತ್ತಿರುವ ವಿಚಾರ ಹಲವಾರು ತಿಂಗಳಿಂದ ಹರಿದಾಡುತ್ತಲೇ ಇದೆ. ಅದರಲ್ಲೂ ಈ ಸಿನಿಮಾದಲ್ಲಿ ರಾವಣನಾಗಿ (Raavan) ಕನ್ನಡದ ನಟ ಯಶ್ (Yash) ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ದೊಡ್ಡ ಸುದ್ದಿ ಆಗಿತ್ತು. ಸಾಕಷ್ಟು ಬಾರಿ ಈ ವಿಚಾರ ಮುನ್ನೆಲೆಗೆ ಬಂದರೂ, ಯಶ್ ಮಾತ್ರ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ, ಈ ಸುದ್ದಿ ಹರಿದಾಡುವುದು ತಪ್ಪಿಲ್ಲ.
ಯಶ್ ಏನೂ ಹೇಳದೇ ಇದ್ದರೂ, ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಮಧು ಮಾಂಟೇನ್ ಅವರು ಯಶ್ ಈ ಸಿನಿಮಾದಲ್ಲಿ ಇರಲಿದ್ದಾರೆ ಎಂದು ಈ ಹಿಂದೆಯೇ ಹೇಳಿದ್ದರು. ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದೂ ಮಾತನಾಡಿದ್ದರು. ಅದು ಈಗ ನಿಜವಾದಂತೆ ಕಾಣುತ್ತಿದೆ. ಈಗಾಗಲೇ ಯಶ್ ಲುಕ್ ಟೆಸ್ಟ್ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಸಿಗುತ್ತಿದೆ. ಈ ಸಿನಿಮಾಗಾಗಿ ಅವರು 15 ದಿನಗಳ ಕಾಲ ಕಾಲ್ ಶೀಟ್ ಕೂಡ ನೀಡಿದ್ದಾರೆ ಎನ್ನುವುದು ತಾಜಾ ಮಾಹಿತಿ.
ನಿತಿಶ್ ತಿವಾರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಸತತ ಮೂರ್ನಾಲ್ಕು ವರ್ಷಗಳಿಂದ ಈ ಚಿತ್ರಕ್ಕಾಗಿ ತಿವಾರಿ ಕೆಲಸ ಮಾಡುತ್ತಿದ್ದಾರೆ. ಮಾರ್ಚ್ 2024ರಲ್ಲಿ ಈ ಸಿನಿಮಾ ಸೆಟ್ಟೇರಬಹುದು ಎಂದು ಅಂದಾಜಿಸಲಾಗಿದೆ. ರಾವಣನಾಗಿ ಯಶ್ ನಟಿಸಿದರೆ, ಶ್ರೀರಾಮನ ಪಾತ್ರವನ್ನು ರಣಬೀರ್ ಕಪೂರ್ (Ranbir Kapoor) ನಿರ್ವಹಿಸಲಿದ್ದಾರೆ. ಸೀತೆ ಪಾತ್ರವು ಸಾಯಿ ಪಲ್ಲವಿ (Sai Pallavi)ಅವರ ಪಾಲಾಗಿದೆ.
ಸದ್ಯ ಯಶ್ ಹೊಸ ಸಿನಿಮಾದ ಕೆಲಸದಲ್ಲಿ ಬ್ಯೂಸಿಯಾಗಿದ್ದಾರೆ. ಅಲ್ಲದೇ ದೇಶ ವಿದೇಶ ಸುತ್ತುತ್ತಿದ್ದಾರೆ. ಸದ್ಯದಲ್ಲೇ ಹೊಸ ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ. ರಾಮಾಯಣ ಸಿನಿಮಾ ಶುರುವಾಗುವ ಹೊತ್ತಿಗೆ ಹೊಸ ಸಿನಿಮಾದ ಬಹುತೇಕ ಕೆಲಸ ಮುಗಿಯುವ ಸಾಧ್ಯತೆ ಇದ್ದು, ಅದಕ್ಕಾಗಿ ಈ ಸಿನಿಮಾವನ್ನು ಯಶ್ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
Web Stories