ನವದೆಹಲಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ಬಂದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ಪತ್ರ ಬರೆದು ಸ್ವತಂತ್ರ ತನಿಖೆಗೆ ಆಗ್ರಹಿಸಿದ್ದಾರೆ.
ಪತ್ರದಲ್ಲಿ, ಸಾವಿರಾರು ಕೋಟಿ ರೂಪಾಯಿ ಮೌಲ್ಯದ ದೇಣಿಗೆ ಕಳವಾಗಿದೆ (Ram Mandir Donation Theft). ತಾವು ಕಷ್ಟಪಟ್ಟು ಸಂಪಾದಿಸಿ ಭಕ್ತಿ ಹಾಗೂ ನಂಬಿಕೆಯಿಂದ ಸಮರ್ಪಿಸಿದ ಹಣ ಕಳವಾಗಿರುವುದು ಲಕ್ಷಾಂತರ ಭಕ್ತರು ತೀವ್ರ ಬೇಸರಗೊಂಡಿದ್ದಾರೆ. ಈ ಪ್ರಕರಣದ ಬಗ್ಗೆ ಸಮಗ್ರ ಹಾಗೂ ಸ್ವತಂತ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ನಾಯಕರು, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಟ್ರಸ್ಟ್ ರಚನೆಯಾಗಿದೆ ಎಂದು ಸಂಸತ್ತಿನಲ್ಲಿ ನೀವು ಘೋಷಿಸಿದ್ದರೂ, ಅದರ ಸದಸ್ಯರನ್ನು ನಿಮ್ಮ ಸರ್ಕಾರವೇ ನೇಮಕ ಮಾಡಿದೆ. ಟ್ರಸ್ಟ್ ಸದಸ್ಯರು ಆರ್ಎಸ್ಎಸ್, ವಿಶ್ವ ಹಿಂದೂ ಪರಿಷತ್ ಹಾಗೂ ಅದರ ಅಂಗಸಂಸ್ಥೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬುದು ಸಾರ್ವಜನಿಕರಿಗೆ ತಿಳಿದಿರುವ ಸಂಗತಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದೇ ವೇಳೆ, ಇಷ್ಟು ಗಂಭೀರ ಆರೋಪಗಳು ಕೇಳಿಬರುತ್ತಿರುವ ಸಂದರ್ಭದಲ್ಲಿ ಪ್ರಧಾನಿಯವರ ಮೌನ ಅಕ್ಷಮ್ಯವಾಗಿದೆ. ಭಕ್ತರ ವಿಶ್ವಾಸವನ್ನು ಉಳಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಟ್ರಸ್ಟ್ನ ಹಣಕಾಸು ವ್ಯವಹಾರಗಳು, ನಗದು, ಚಿನ್ನ, ಬೆಳ್ಳಿ ಸೇರಿದಂತೆ ಎಲ್ಲ ದೇಣಿಗೆಗಳ ನಿರ್ವಹಣೆ ಕುರಿತು ಸ್ವತಂತ್ರ ಹಾಗೂ ಸಮಗ್ರ ತನಿಖೆ ನಡೆಸುವಂತೆ ತಕ್ಷಣ ಆದೇಶಿಸಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

ಇದಲ್ಲದೆ, ತನಿಖೆಯ ವರದಿ ಹಾಗೂ ಟ್ರಸ್ಟ್ನ ಸಂಪೂರ್ಣ ಲೆಕ್ಕಪತ್ರಗಳನ್ನ ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು. ದೇಣಿಗೆಯ ಹಣವನ್ನು ಹೇಗೆ ಬಳಸಲಾಗಿದೆ ಎಂಬ ಮಾಹಿತಿ ಪ್ರತಿಯೊಬ್ಬ ಭಕ್ತನಿಗೂ ತಿಳಿಯುವಂತಾಗಬೇಕು. ಯಾವುದೇ ಹುದ್ದೆ ಅಥವಾ ಪ್ರಭಾವವನ್ನ ಲೆಕ್ಕಿಸದೇ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
