ಚಿಕ್ಕಬಳ್ಳಾಪುರ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಗ್ರಾಮದಲ್ಲಿ ನಡೆದಿದೆ.
ಯೋಗೇಶ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಹೋಟೆಲ್ ಮಾಲೀಕ ಬೋಜಣ್ಣನವರ ಹಿರಿಯ ಮಗ ಯೋಗೇಶ್ ಕಾರಣಾಂತರಗಳಿಂದ ಎಂಜಿನಿಯರಿಂಗ್ ವ್ಯಾಸಂಗ ಅರ್ಧಕ್ಕೆ ಬಿಟ್ಟಿದ್ದನು. ಬಳಿಕ ಹೋಟೆಲ್ ಉಸ್ತುವಾರಿ ನೋಡಿಕೊಳ್ಳುತ್ತಿದ್ದನು.
ಯೋಗೇಶ್ ತನ್ನ ಸಂಬಂಧಿಕರೊಬ್ಬರನ್ನು ಪ್ರೀತಿ ಮಾಡುತ್ತಿದ್ದ ಎಂದು ಹೇಳಲಾಗುತ್ತಿದ್ದು, ಕೆಲ ಕಾರಣಾಂತರಗಳಿಂದ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ. ಹೀಗಾಗಿ ಮನನೊಂದ ಯೋಗೇಶ್ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ.
ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.