ಮಂಗಳೂರು: ಯುವಕನಿಗೆ ಚೂರಿ ಇರಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಮತ್ತೆ ಉದ್ವಿಗ್ನಗೊಂಡಿದೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು ಎಸ್ಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಕಲ್ಲಡ್ಕ ನಿವಾಸಿ ಮುಹಮ್ಮದ್ ಹಾಶಿರ್ ಚೂರಿ ಇರಿತದಿಂದ ಗಾಯಗೊಂಡ ಯುವಕ. ಈ ಘಟನೆಯು ಶುಕ್ರವಾರ ಮಧ್ಯಾಹ್ನ ನಡೆದಿದೆ. ಮುಹಮ್ಮದ್ ಹಾಶಿರ್ ಜುಮಾ ನಮಾಝ್ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ಮಿಥುನ್ ಮತ್ತು ತಂಡ ಚೂರಿಯಿಂದ ಇರಿದು ಪರಾರಿಯಾಗಿದೆ. ಘಟನೆಯಿಂದ ಯುವಕನ ಬೆನ್ನಿಗೆ ಗಾಯವಾಗಿದ್ದು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಜೀಪ ಮುನ್ನೂರಿನ ಹರೀಶ್ ಗೌಡ ಎಂಬವರ ಕೊಲೆ ಯತ್ನ ಹಾಗೂ ದರೋಡೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಿಥುನ್ ಹಾಗೂ ಆತನ ತಂಡ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಹೊರಬಂದಿದ್ರು. ಆ ಬಳಿಕ ಕಲ್ಲಡ್ಕದಲ್ಲಿ ಪರಿಸ್ಥಿತಿ ಬಿಗಡಾಯಿಸಿತ್ತು. ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು. ಇಂದು ಕೂಡ ಕಲ್ಲಡ್ಕದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು ಬಹುತೇಕ ಅಂಗಡಿ ಮುಗ್ಗಟ್ಟುಗಳನ್ನ ಮುಚ್ಚಲಾಗಿದೆ.
ಸ್ಥಳದಲ್ಲಿ ಭಾರಿ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ. ಸ್ಥಳಕ್ಕೆ ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ಗುಂಪೊಂದು ಕಲ್ಲು ತೂರಾಟಕ್ಕೆ ಯತ್ನಿಸಿದ ಘಟನೆಯೂ ನಡೆದಿದೆ.